SHIVAMOGGA | MALENADUTODAY NEWS | ಮಲೆನಾಡು ಟುಡೆ

ಶಿವಮೊಗ್ಗ| ಮಹಿಳಾ ಅಧಿಕಾರಿಯ ಮೇಲಿನ ದೌರ್ಜನ್ಯ ಖಂಡಿಸಿ ಫೆಬ್ರವರಿ 14ರಂದು ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಭದ್ರಾವತಿಯಲ್ಲಿ ಗಾಂಜಾ, ಇಸ್ಪೀಟ್, ಅಕ್ರಮ ಮರಳು ದಂಧೆ, ಮೀಟರ್ ಬಡ್ಡಿ ದಂಧೆ, ಅಕ್ರಮ ನಾಟಾ ಸಾಗಣೆ ಸೇರಿದಂತೆ ಹಲವು ಅಕ್ರಮ ಚಟುವಟಿಕೆ ನಿರಂತರವಾಗಿ ನಡೆಯುತ್ತಿವೆ ಎಂದು ಆರೋಪಿಸಿದರು.

ಇದಕ್ಕೆ ಸಾಕ್ಷಿ ಎಂಬಂತೆ ಅಕ್ರಮ ಮರಳು ಸಾಗಣೆಗೆ ಸಂಬಂಧಿಸಿದಂತೆ ಅದನ್ನು ತಡೆಯಲು ಬಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಲಾಗಿದೆ. ಹೀಗಾದರೆ ಅಧಿಕಾರಿಗಳು ಹೇಗೆ ಕೆಲಸ ಮಾಡಲು ಸಾಧ್ಯ. ಮಹಿಳೆ ಎಂದು ನೋಡದೇ ಅಶ್ಲೀಲವಾಗಿ ನಿಂದಿಸಲಾಗಿದೆ ಎಂದು ದೂರಿದರು.
ಪಕ್ಷದ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಮಾತನಾಡಿ, ಭದ್ರಾವತಿಯ ಅಕ್ರಮಗಳಿಗೆ ಕೊನೆಯೇ ಇಲ್ಲದಂತಾಗಿದೆ. ಶುಕ್ರವಾರ ಭದ್ರಾವತಿಯ ಮಾಧವಾಚಾರ್ ಸರ್ಕಲ್ ನಿಂದ ತಾಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದರು.
ಶಾಸಕ ಸಂಗಮೇಶ್ ಕೂಡಲೇ ರಾಜಿನಾಮೆ ನೀಡಬೇಕು | ಕೆಬಿ ಪ್ರಸನ್ನ ಕುಮಾರ್
ಜೆಡಿಎಸ್ ರಾಜ್ಯ ಕೋರ್ ಕಮಿಟಿ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ಮಹಿಳಾ ಅಧಿಕಾರಿಯ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಬೇಕೋ ಅವರನ್ನು ಬಂಧಿಸಿಲ್ಲ. ಇಡೀ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥರ ಮೇಲೆ ಕಠಿಣಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.