in Sagara Shivamogga / ಮಲೆನಾಡು ಟುಡೆ ಸುದ್ದಿ / ಸಾಗರ / ಇಲ್ಲಿನ ಹೆಗ್ಗೋಡು ಸಮೀಪದ ಅತ್ತಿಸರ ಗ್ರಾಮದಲ್ಲಿ ದುರಂತವೊಂದು ಸಂಭವಿಸಿದೆ. ಮನೆಯ ಹಿಂಭಾಗದಲ್ಲಿದ್ದ ಬಾಳೆಗಿಡದಲ್ಲಿ ಗೂಡು ಕಟ್ಟಿದ್ದ ಕಣಜದ ಹುಳುಗಳು ಏಕಾಏಕಿ ದಾಳಿ ಮಾಡಿದ ಪರಿಣಾಮ 8 ವರ್ಷದ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಅತ್ತಿಸರ ಗ್ರಾಮದ ನಿವಾಸಿ ವೆಂಕಟೇಶ್ ಅವರ ಪುತ್ರ ನಿಶ್ಚಿತ್ (8) ಮೃತ ಬಾಲಕ. ಈತ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.
ಇವರ ಮನೆ ಹಿಂಬದಿಯಲ್ಲಿದ್ದ ಬಾಳೆಗಿಡದಲ್ಲಿ ಕಣಜ ಗೂಡು ಗಟ್ಟಿತ್ತು. ಈ ಹುಳುಗಳು ನಿಶ್ಚಿತ್ ಹಾಗೂ ಆತನ ತಂದೆ ವೆಂಕಟೇಶ್ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಅಪ್ಪ ಮಗ ಇಬ್ಬರು ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೆ ಇಬ್ಬರನ್ನು ಹೆಗ್ಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.
ಹೆಗ್ಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ, ತಂದೆ ಮಗನನ್ನು ನಗರದಲ್ಲಿರುವ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ನಿಶ್ಚಿತ್ ಕೊನೆಯುಸಿರೆಳೆದಿದ್ದಾನೆ. ಸದ್ಯ ವೆಂಕಟೇಶ್ರವರಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎರಡನೇ ತರಗತಿಯಲ್ಲಿ ಓದುತ್ತಿದ್ದ ಚಿಕ್ಕ ವಯಸ್ಸಿನ ಮಗನನ್ನು ಕಳೆದುಕೊಂಡ ಕುಟುಂಬದ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದ್ದು, ಅತ್ತಿಸರ ಗ್ರಾಮದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ.
