ಶಿವಮೊಗ್ಗ: ರಾಜ್ಯದಲ್ಲಿ ಒಳಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಮಾದಾರ ಮಹಾಸಭಾ ಇಂದು ನಡೆಸಿದ ಬೃಹತ್ ಪ್ರತಿಭಟನ ನಡೆಸಿತು ಈ ವೇಳೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಪ್ರಯತ್ನಿಸಿದ್ದು, ಕೆಲಕಾಲ ಪರಿಸ್ಥಿತಿ ಕೈಮೀರುವ ಹಂತಕ್ಕೆ ತಲುಪಿತ್ತು.
ತಾಳಗುಪ್ಪ-ಕೆಎಸ್ಆರ್, ಶಿವಮೊಗ್ಗ ತುಮಕೂರು ಟ್ರೈನ್ ಸೇರಿದಂತೆ 2 ದಿನ 20 ಕ್ಕೂ ಹೆಚ್ಚು ರೈಲು ಸಂಚಾರದಲ್ಲಿ ಬದಲಾವಣೆ
ಬೆಳಿಗ್ಗೆ ಮಹಾನಗರ ಪಾಲಿಕೆ ಆವರಣದ ಅಂಬೇಡ್ಕರ್ ಪ್ರತಿಮೆಗೆ ಗೌರವ ಸಲ್ಲಿಸಿ ಆರಂಭವಾದ ಈ ಆಕ್ರೋಶದ ನಡಿಗೆ, ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿತು. ಅಮೀರ್ ಅಹಮದ್ ವೃತ್ತದಲ್ಲಿ ಪ್ರತಿಭಟನಾಕಾರರು ಟೈರ್ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿಳಂಬ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ತೀವ್ರ ವಿರೋಧವನ್ನು ವ್ಯಕ್ತಪಡಿಸಿದರು.
ನಗರದ ಶೀನಪ್ಪ ಶೆಟ್ಟಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ್ದರಿಂದ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ತಲುಪುತ್ತಿದ್ದಂತೆ, ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ಭೇದಿಸಿ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಭಾರಿ ತಳ್ಳಾಟ-ನೂಕಾಟ ನಡೆಯಿತು.
ಬಳಿಕ ಮಾತನಾಡಿದ ಮಾದಾರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಆರ್. ತೇಜೇಸ್, ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದ್ದರೂ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಕಿಡಿಕಾರಿದರು. ಮಾರ್ಚ್ 27ರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಗಟ್ಟಿ ತೀರ್ಮಾನ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಸ್ಥಳಕ್ಕಾಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಅಭಿಷೇಕ್ ಅವರು ಮುಖಂಡರಿಂದ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಮಾದಾರ ಮಹಾಸಭಾ ಅಧ್ಯಕ್ಷ ಶಿವಾಜಿ, ಅಲೆಮಾರಿ ಸಮುದಾಯದ ಲೋಕೇಶ್ ಚಾವಡಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಅಹಿತಕರ ಘಟನೆಗಳು ನಡೆಯದಂತೆ ಡಿವೈಎಸ್ಪಿಗಳ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
Internal Reservation Protest Madara Mahasabha


