Farmers Alert ಶಿವಮೊಗ್ಗ: ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದುಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ.
2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ ಜಾರಿಗೆ ಬರಲಿದ್ದು, ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟವಾಗುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.
ಕೆ-ಕಿಸಾನ್ ತಂತ್ರಾಂಶದ ಬಳಕೆ
ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ಗೊಬ್ಬರ ಅಗತ್ಯವಿದೆಯೋ ಅಷ್ಟನ್ನು ಮಾತ್ರ ಕೆ-ಕಿಸಾನ್ ತಂತ್ರಾಂಶದ ಮೂಲಕ ವಿತರಿಸಲಾಗುವುದು.
ಹೊಸ ಎಫ್ಐಡಿ ನೋಂದಣಿ
ಇದುವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ತಕ್ಷಣವೇ ತಮ್ಮ ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬೇಕು.
ಸರ್ವೆ ನಂಬರ್ ಜೋಡಣೆ
ಈಗಾಗಲೇ ಎಫ್ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೆ ನಂಬರ್ಗಳನ್ನು ಅದಕ್ಕೆ ಜೋಡಣೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಮಾರಾಟಗಾರರಿಗೆ ಎಚ್ಚರಿಕೆ
ಅಧಿಕೃತ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್ಐಡಿ ನಮೂದಿಸಿಯೇ ಗೊಬ್ಬರ ಮಾರಾಟ ಮಾಡಬೇಕು. ಈ ಸಂಬಂಧ ಇಲಾಖಾಧಿಕಾರಿಗಳಿಗೆ ತರಬೇತಿ ಹಾಗೂ ಮಾಹಿತಿ ನೀಡಲಾಗಿದೆ. ಚಿಲ್ಲರೆ ರಸಗೊಬ್ಬರ ಮಾರಾಟಗಾರರು ತಮ್ಮ ಎಲ್ಲ ಓ ಫಾರಂ ನವೀಕರಣಗೊಳಿಸಿಕೊಳ್ಳಬೇಕು. ಒಂದು ವೇಳೆ ಮಾರಾಟಗಾರರು ಓ ಫಾರಂ ಗಳ ನೋಂದಣಿ ಇಲ್ಲದೇ ಮಾರಾಟ ಮಾಡಿದಲ್ಲಿ, ನಿಯಮ ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃಷಿಯೇತರ ಉದ್ದೇಶಕ್ಕೆ ಗೊಬ್ಬರ ನೀಡಿದರೆ ಅಂತಹ ಮಾರಾಟಗಾರರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Farmers Alert No Urea Without FID in Shimoga

