ಹೊಸನಗರ: ಕುಂದಾಪುರಕ್ಕೆ ಹೋಗ್ತಿದ್ದ ಖಾಸಗಿ ಬಸ್ ಪಲ್ಟಿ | Hosanagara Bus

ಹೊಸನಗರ: ಕುಂದಾಪುರಕ್ಕೆ ಹೋಗ್ತಿದ್ದ ಖಾಸಗಿ ಬಸ್ ಪಲ್ಟಿ | Hosanagara Bus

ಮಲೆನಾಡು ಟುಡೆ ಸುದ್ದಿ / ಹೊಸನಗರ / ಹೊಸನಗರ ಹೊರವಲಯದ ರಾಜ್ಯ ಹೆದ್ದಾರಿ 766 ಸಿ ಯಲ್ಲಿರುವ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಮುಂಜಾನೆ ಜರುಗಿದೆ. ಬೆಳಿಗ್ಗೆ 5:15ರ ಸುಮಾರಿಗೆ ಬೆಂಗಳೂರಿನಿಂದ ಕುಂದಾಪುರ ಕಡೆಗೆ ಪ್ರಯಾಣ ಬೆಳೆಸಿದ್ದ ಸಾಗರ್ ಹೆಸರಿನ ಖಾಸಗಿ ಬಸ್, ತಿರುವಿನಲ್ಲಿ ಎಡಭಾಗಕ್ಕೆ ಮಗುಚಿ ಬಿದ್ದಿದೆ. ಪರಿಣಾಮವಾಗಿ ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದಲ್ಲಿ ಗಾಯಗೊಂಡ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಹೊಸನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಒದಗಿಸಲಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರು ಕೊಲ್ಲೂರು ದೇವಸ್ಥಾನದ ದರ್ಶನ, ಗೃಹಪ್ರವೇಶ ಹಾಗೂ ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಉತ್ಸಾಹದಿಂದ ಹೊರಟಿದ್ದ ಪ್ರಯಾಣಿಕರು, ಅಪಘಾತದ ಪರಿಣಾಮವಾಗಿ ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ನಿರ್ಮಾಣವಾಯಿತು.

ಈ ರಸ್ತೆ ಅಪಘಾತದ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

#Hosanagara #BusAccident #ShivamoggaNews #RoadSafety #PrivateBus #Kundapura #KannadaNews #MalenaduToday