ಚೆನ್ನೈ: ತಮಿಳುನಾಡು ಬಿಜೆಪಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಿರ್ಧಾರವನ್ನು ಬಿಜಿಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಇಂದು ಅಂಗೀಕರಿಸಿದ್ದಾರೆ.
ತಮ್ಮ ರಾಜೀನಾಮೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಅಣ್ಣಾಮಲೈ, ಇಂದು ಮಧ್ಯಾಹ್ನ 12 ಗಂಟೆಗೆ ಸೋಷಿಯಲ್ ಮೀಡಿಯಾ ಲೈವ್ ಮೂಲಕ ಸಾರ್ವಜನಿಕರೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಸಂವಾದದಲ್ಲಿ ಅವರು ತಮ್ಮ ಮುಂದಿನ ರಾಜಕೀಯ ಹೆಜ್ಜೆಯ ಬಗ್ಗೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆಯಿದೆ. ಈ ಮಹತ್ವದ ತೀರ್ಮಾನಕ್ಕೂ ಮುನ್ನ ಅಣ್ಣಾಮಲೈ ಅವರು ಕಳೆದ ಸೋಮವಾರದಿಂದಲೇ ದೇಶದ ರಾಜಧಾನಿ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದರು. ಈ ವೇಳೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ, ಪಕ್ಷ ತೊರೆಯುತ್ತಿರುವುದಾಗಿ ವಿವರಿಸಿದ್ದರು. ಚೆನ್ನೈಗೆ ಮರಳುವ ಮುನ್ನ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೂ ಮಾತುಕತೆಗೆ ಸಮಯಾವಕಾಶ ಕೋರಿದ್ದಾರೆ ಎನ್ನಲಾಗಿದೆ.
ತಮ್ಮ ಮುಂದಿನ ಹೆಜ್ಜೆಯ ಕುರಿತು ಟ್ವೀಟ್ ಮಾಡಿರುವ ಅಣ್ಣಾಮಲೈ, ನಿಮ್ಮೆಲ್ಲರ ಜೊತೆ ಸಾಮಾಜಿಕ ಜಾಲತಾಣಗಳ ಮೂಲಕ ಮುಕ್ತವಾಗಿ, ಹೃದಯಾಂತರಾಳದ ಮಾತುಗಳನ್ನು ಹಂಚಿಕೊಳ್ಳಲು ನಾನು ಉತ್ಸುಕನಾಗಿದ್ದೇನೆ, ಎಂದು ಬರೆದುಕೊಂಡಿದ್ದಾರೆ.
