DISTRICT

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಕಳ್ಳತನ, ಭದ್ರಾವತಿ ಮೂವರು ಮಹಿಳೆಯರ ಬಂಧನ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Kollur Mookambika Temple / ಮಲೆನಾಡು ಟುಡೆ ಸುದ್ದಿ / ಕೊಲ್ಲೂರು / ಶಿವಮೊಗ್ಗ / ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದಿದ್ದ ಕಳ್ತನ ಪ್ರಕರಣವೊಂದನ್ನ ಉಡುಪಿ ಪೊಲೀಸರು ಭೇದಿಸಿದ್ದು, ಪ್ರಕರಣದಲ್ಲಿ ಭದ್ರಾವತಿಯ ಮೂಔರು ಮಹಿಳೆಯರು ಅರೆಸ್ಟ್ ಆಗಿದ್ದಾರೆ.

ದೇವರ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ 80 ಸಾವಿರ ರೂಪಾಯಿ ಕದ್ದಿದ್ದ ಪ್ರಕರಣವಿದು. ಕೊಲ್ಲೂರು ಪೊಲೀಸರು ಕೇವಲ 24 ಗಂಟೆಗಳಲ್ಲಿ, ಈ ಕೇಸ್​ ಕ್ಲಿಯರ್ ಮಾಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಭದ್ರಾವತಿ ಮೂಲದ ನೇತ್ರಾವತಿ (33), ಶಾರದ (50) ಹಾಗೂ ದುರ್ಗಮ್ಮ (44) ಬಂಧಿತ ಆರೋಪಿಗಳೆಂದು ಅಲ್ಲಿನ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜುಲೈ 5ರಂದು ನಿಮಿಶಾ ಹಾಗೂ ಅವರ ಪತಿ ಪ್ರಜೋಶ್ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಂದು ಬೆಳಿಗ್ಗೆ 8.20 ರ ಸುಮಾರಿಗೆ ದೇವರ ದರ್ಶನ ಮುಗಿಸಿ ದೇವಸ್ಥಾನದ ಹೊರಾಂಗಣಕ್ಕೆ ಬಂದಾಗ, ನಿಮಿಶಾ ಅವರ ಕಂದು ಬಣ್ಣದ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆದಿರುವುದು ಗಮನಕ್ಕೆ ಬಂದಿದೆ. ಬ್ಯಾಗ್ ಪರಿಶೀಲಿಸಿದಾಗ, 80 ಸಾವಿರ ರೂಪಾಯಿ ಇದ್ದ ಪರ್ಸ್​ ಕಾಣೆಯಾಗಿತ್ತು. ಈ ಸಂಬಂಧ ದೂರು ಕೊಟ್ಟಿದ್ದರು.

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯ ಎಸ್​ಐ ವಿನಯ್ ಎಂ. ಕೊರ್ಲಹಳ್ಳಿ ನೇತೃತ್ವದ ತಂಡ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ ಹಾಗೂ ಜನರು ತೆಗೆದ ಫೋಟೋಗಳನ್ನ ಸಂಗ್ರಹಿಸಿ, ತಾಂತ್ರಿಕ ಮಾಹಿತಿ ಒಟ್ಟುಮಾಡಿತ್ತು. ಆನಂತರ ಮೂವರು ಆರೋಪಿಗಳನ್ನು ಪತ್ತೆಹಚ್ಚಿ ಅರೆಸ್ಟ್ ಮಾಡಿದೆ.

ಪೊಲೀಸರ ತನಿಖೆಯ ವೇಳೆ ಬಂಧಿತ ಮಹಿಳೆಯರ ಕ್ರಿಮಿನಲ್ ಹಿನ್ನೆಲೆ ಕೂಡ ಬೆಳಕಿಗೆ ಬಂದಿದೆ, ಆರೋಪಿ ದುರ್ಗಮ್ಮನ ವಿರುದ್ಧ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆ ಹಾಗೂ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿವೆ. ಮತ್ತೊಬ್ಬ ಆರೋಪಿ ಶಾರದಳ ವಿರುದ್ಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎರಡು ಮತ್ತು ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ಮೂರು ಕಳ್ಳತನ ಪ್ರಕರಣಗಳಿವೆ.

ಇನ್ನೂ ಕಾರ್ಯಾಚರಣೆಯಲ್ಲಿ ತನಿಖಾಧಿಕಾರಿ ಪಿಎಸ್‌ಐ ಭೀಮಶಂಕರ್, ಹೆಡ್ ಕಾನ್ಸ್‌ಟೇಬಲ್ ರತ್ನಾಕರ, ಪೊಲೀಸ್ ಕಾನ್ಸ್‌ಟೇಬಲ್ ಸಂತೋಷ್, ಕುಂದಾಪುರ ಠಾಣೆಯ ಸಿಬ್ಬಂದಿ ಘನಶ್ಯಾಮ್, ಪದ್ಮಾವತಿ ಹಾಗೂ ಬೈಂದೂರು ಠಾಣೆಯ ಚಂದ್ರಶೇಖರ್ ಪಾಲ್ಗೊಂಡಿದ್ದರು.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ