Shivamogga DC SP / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿನ್ನೆ ದಿನ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ , ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಗರದ ಆಟೊರಿಕ್ಷಾ ಸಂಚಾರ ವ್ಯವಸ್ಥೆಯಲ್ಲಿರುವ ಲೋಪದೋಷಗಳು ಹಾಗೂ ಅವುಗಳ ಪರಿಹಾರ ಕ್ರಮಗಳ ಕುರಿತು ವಿಶೇಷ ಸಭೆ ಕರೆದು ಚರ್ಚಿಸಿದರು.
ಈ ವೇಳೆ ಅವರು , ನೆರೆಯ ಜಿಲ್ಲೆಗಳಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿರುವ ಮಾನದಂಡಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ದರ ಪರಿಷ್ಕರಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರಾಪಿಡೊ ಅಥವಾ ಅದೇ ಮಾದರಿಯ ಇತರೆ ಯಾವುದೇ ಸಂಸ್ಥೆಗಳು ಸಾರಿಗೆ ಸೇವೆಯನ್ನು ಪ್ರಾರಂಭಿಸಬೇಕಾದರೆ ಸರ್ಕಾರದ ಅಧಿಕೃತ ಮಾರ್ಗಸೂಚಿಗಳ ಅನ್ವಯವೇ ಅನುಮತಿ ನೀಡಲಾಗುವುದು. ಸೂಕ್ತ ಮಾನ್ಯತೆ ಹಾಗೂ ಅಗತ್ಯ ದಾಖಲಾತಿಗಳಿಲ್ಲದೆ ಅನಧಿಕೃತವಾಗಿ ವಾಹನಗಳ ಕಾರ್ಯಾಚರಣೆ ನಡೆಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಈ ಮಹತ್ವದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಶಿರೋಳಕರ್, ಕೆಎಸ್ಆರ್ಟಿಸಿ ನಿಯಂತ್ರಣಾಧಿಕಾರಿ ದಿನೇಶ್ ಹಾಗೂ ಆಟೊ ಚಾಲಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದೇ ವೇಳೇ ಆಟೋ ಚಾಲಕರು, ನಗರದಲ್ಲಿ ರಾಪಿಡೊ ಬೈಕ್ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದು, ಸಂಚಾರಿ ಮಾರ್ಗಸೂಚಿಗಳು ಬಿಡುಗಡೆಯಾಗುವವರೆಗೆ ಈ ವಾಹನಗಳ ಸಂಚಾರವನ್ನು ತಡೆಯಬೇಕು ಅಂತಾ ಮನವಿ ಮಾಡಿದರು.
ಅಲ್ಲದೆ ಬಹುಪಾಲು ರಾಪಿಡೊ ಚಾಲಕರು ಲೈಸೆನ್ಸ್ ಹೊಂದಿಲ್ಲದಿರುವುದರಿಂದ ಅಪಘಾತ ಸಂಭವಿಸುವ ಅಪಾಯವಿದೆ. ಅಲ್ಲದೆ, ಇದರಿಂದಾಗಿ ಆಟೊ ಚಾಲಕರ ಜೀವನ ನಿರ್ವಹಣೆಗೂ ತೊಂದರೆಯಾಗುತ್ತಿದೆ ಎಂದು ಅವರು ಅಳಲು ತೋಡಿಕೊಂಡರು.
ಅಂತಿಮವಾಗಿ ಆಟೊ ರಿಕ್ಷಾಗಳ ಕನಿಷ್ಠ ಪ್ರಯಾಣ ದರವನ್ನು 50 ರೂಪಾಯಿಗಳಿಗೆ ಹೆಚ್ಚಳ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಆಟೊ ಚಾಲಕರು ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಕಿವಿಮಾತು ಹೇಳಿದರು. ವಿಶೇಷವಾಗಿ ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುವಾಗ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಆಟೊರಿಕ್ಷಾಗಳಲ್ಲಿ ಚಾಲಕ ಮತ್ತು ಮಾಲೀಕರ ಮಾಹಿತಿಯನ್ನು ಒಳಗೊಂಡ ಫಲಕವನ್ನು ಅಳವಡಿಸುವುದು ಕಡ್ಡಾಯವಾಗಿದೆ
ನಿಖಿಲ್.ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.
