Mudigere / ಮಲೆನಾಡು ಟುಡೆ ಸುದ್ದಿ / ಚಿಕ್ಕಮಗಳೂರು / ಜಿಲ್ಲೆಯ ಮೂಡಿಗೆರೆ ಕಾಫಿತೋಟಗಳಲ್ಲಿ ಕಾರ್ಮಿಕರ ಸೋಗಿನಲ್ಲಿ ನೆಲೆಸಿದ್ದ ಐವರು ಅಕ್ರಮ ಬಾಂಗ್ಲಾ ಪ್ರಜೆಗಳನ್ನು ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ಗುಪ್ತಚರ ಇಲಾಖೆ ಖಚಿತ ಮಾಹಿತಿ ಆಧರಿಸಿ ಕಾರ್ಯಾ ಚರಣೆ ನಡೆಸಿದ ಪೊಲೀಸರು ಜಹಾಂಗೀರ್, ಫೈಸುದ್ದೀನ್, ನುಮನ್ ಬಶೀರ್, ಮಹಮದ್ ಹುಮ್ಮೆನ್ ಹಾಗೂ ಮಹಮದ್ ಹಸೀಬುಲ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.
ಇವರನ್ನು ಚಿಕ್ಕಮಗಳೂರಿನ ಡಿಆರ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ವಶಕ್ಕೆ ಪಡೆದಿರುವ ಐವರಲ್ಲಿ ಬಾಂಗ್ಲಾದೇಶದ ಅಧಿಕೃತ ಗುರುತಿನ ಚೀಟಿಗಳು ಪತ್ತೆಯಾಗಿವೆ.
ಇವರ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ದಯಾಮ ಅವರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರಿಗೆ ಪತ್ರ ಬರೆದಿದ್ದಾರೆ.
ಮಲೆನಾಡಿನ ಕಾಫಿತೋಟಗಳಲ್ಲಿ ಸಾವಿರಾರು ಅಕ್ರಮ ಬಾಂಗ್ಲಾ ನಿವಾಸಿಗಳು ಆಶ್ರಯ ಪಡೆದಿದ್ದಾರೆ ಎಂದು ವಿವಿಧ ಸಂಘಟನೆಗಳು ಮಾಡುತ್ತಿದ್ದ ಆರೋಪಗಳಿಗೆ ಈಗ ಪುಷ್ಟಿ ಸಿಕ್ಕಿದೆ. ಇನ್ನೂ ಹಲವು ಅಕ್ರಮ ವಲಸಿಗರು ಇರುವ ಶಂಕೆ ಇದ್ದು ತನಿಖೆಗೆ ಒತ್ತಾಯಿಸಿದ್ದಾರೆ.
