Shivamogga ಶಿವಮೊಗ್ಗ | ಶಿವಮೊಗ್ಗ ನಗರದ ನೆಹರೂ ರಸ್ತೆಯಲ್ಲಿರುವ ಶಾಸಕ ಚನ್ನಬಸಪ್ಪ ಅವರ ಕಚೇರಿಯ ಮುಂಭಾಗದಲ್ಲಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಸದಸ್ಯರು ಹಾಗೂ ಸಾರ್ವಜನಿಕರು ಬೃಹತ್ ಪ್ರತಿಭಟನೆ ನಡೆಸಿ, ಕಚೇರಿಗೆ ಮುತ್ತಿಗೆ ಹಾಕಿದ ಪ್ರಸಂಗ ನಡೆದಿದೆ. ನಗರದಲ್ಲಿ ದಿನೇ ದಿನೇ ಉಲ್ಬಣಗೊಳ್ಳುತ್ತಿರುವ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಹಾಗೂ ಈ ಹಿಂದೆ ನೀಡಿದ ಹಲವು ಮನವಿಗಳಿಗೆ ಶಾಸಕರು ಮತ್ತು ಜಿಲ್ಲಾಡಳಿತ ಸ್ಪಂದಿಸದಿರುವುದನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಗುರುಪೂರ್ಣಿಮೆ ವಿಶೇಷ: ಶಿವಮೊಗ್ಗದ ದುರ್ಗಿಗುಡಿ ರಾಯರ ಮಠದಲ್ಲಿ ವಿಶೇಷ ಪೂಜೆ!
ಪ್ರತಿಭಟನಾಕಾರರು ಮುಖ್ಯವಾಗಿ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಅಭಾವಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಸರಬರಾಜಾಗುತ್ತಿರುವ ಕಲುಷಿತ ನೀರಿನ ಸಮಸ್ಯೆಗೆ ತಕ್ಷಣವೇ ಮುಕ್ತಿ ನೀಡಬೇಕೆಂದು ಒತ್ತಾಯಿಸಿದರು. ಇದರೊಂದಿಗೆ, ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 300 ಕೋಟಿ ರೂಪಾಯಿ ವೆಚ್ಚದಲ್ಲಿ ಯು.ಜಿ. ಕೇಬಲ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದರೂ, ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿ ನಿಂತಿರುವ ಹಳೆಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಲ್ಲದೆ, ಸ್ಮಾರ್ಟ್ ಸಿಟಿ ಯೋಜನೆಯ ಭಾಗವಾಗಿ ಕೋಟಿಗಟ್ಟಲೆ ಹಣ ವೆಚ್ಚ ಮಾಡಿ ನಿರ್ಮಿಸಲಾಗಿರುವ ಇ-ಶೌಚಾಲಯಗಳು ಸಾರ್ವಜನಿಕರ ಬಳಕೆಗೆ ಲಭ್ಯವಾಗದೆ ಬೀಗ ಹಾಕಲ್ಪಟ್ಟಿರುವುದನ್ನು ತಕ್ಷಣವೇ ಸರಿಪಡಿಸಿ ತೆರೆಯಬೇಕು ಎಂದು ಮನವಿ ಮಾಡಿದರು . ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ಕಂಡುಬಂದಿರುವ ಲೋಪದೋಷಗಳನ್ನು ಸರಿಪಡಿಸುವುದು, ಖಾತೆ ಬದಲಾವಣೆ ಶುಲ್ಕವನ್ನು ನಿಯಮಬದ್ಧಗೊಳಿಸಿ ಸಾರ್ವಜನಿಕರಿಂದ ಪಡೆದ ಹೆಚ್ಚುವರಿ ಹಣವನ್ನು ಹಿಂತಿರುಗಿಸುವುದು ಹಾಗೂ ಸಾರ್ವಜನಿಕ ರಸ್ತೆಯಲ್ಲಿ SBUDA ನಿರ್ಮಿಸಿರುವ ಅನಧಿಕೃತ ಶೆಡ್ಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಶಾಸಕರ ಮುಂದಿಟ್ಟರು.
