ಶಿಕಾರಿಪುರ,ಮಲೆನಾಡುಟುಡೆ ನ್ಯೂಸ್: ಮಲೆನಾಡು ಭಾಗ ಹಾಗೂ ಶಿವಮೊಗ್ಗ ಜಿಲ್ಲಾದ್ಯಂತ ದಿನೇ ದಿನೇ ಹೆಚ್ಚಾಗುತ್ತಿರುವ ಗೋ ಕಳ್ಳತನ, ಅಕ್ರಮ ಗೋ ಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಆಗ್ರಹಿಸಿ ಹಾಗೂ ಇತ್ತೀಚೆಗೆ ಬಜರಂಗದಳದ ಕಾರ್ಯಕರ್ತನ ಮೇಲಿನ ಹಲ್ಲೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿಯಾಗಿದ್ದು, ಪಟ್ಟಣ ಬಹುತೇಕ ಸ್ತಬ್ದಗೊಂಡಿತ್ತು.
ಸಂಘಟನೆಗಳು ಕರೆ ನೀಡಿದ್ದ ಬಂದ್ಗೆ ಶಿಕಾರಿಪುರ ಪಟ್ಟಣದ ವರ್ತಕರು, ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವ ಮೂಲಕ ಪೂರ್ಣ ಬೆಂಬಲ ಸೂಚಿಸಿದ್ದರು. ಆರಂಭದಲ್ಲಿ ತೆರೆದಿದ್ದ ಕೆಲವು ಅಂಗಡಿಗಳನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಂದ್ ಮಾಡಿಸಿದರು. ಸ್ಥಳೀಯ ಖಾಸಗಿ ಬಸ್ ನಿಲ್ದಾಣದ ಬಳಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಗೋ ಪೂಜೆ ನೆರವೇರಿಸುವ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು.
ಸಂಸದ ಬಿ.ವೈ. ರಾಘವೇಂದ್ರ ಅವರು ಗೋ ಪೂಜೆಯಲ್ಲಿ ಭಾಗವಹಿಸಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಶಿಕಾರಿಪುರದ ಪ್ರಮುಖ ರಸ್ತೆಗಳ ಮೂಲಕ ಸಾಗಿದ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆಯು ಪಟ್ಟಣದ ಅಕ್ಕಮಹಾದೇವಿ ವೃತ್ತ ತಲುಪಲಿದ್ದು, ಅಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪಟ್ಟಣದಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
