ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ (Minister Madhu Bangarappas)ಅವರು ಆ.22 ಮತ್ತು 23ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಆ.22ರ ಶನಿವಾರ ಬೆಳಿಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಡುವ ಸಚಿವರು, ತುಮಕೂರು–ಚಿತ್ರದುರ್ಗ–ದಾವಣಗೆರೆ ಮಾರ್ಗವಾಗಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಶಿವಮೊಗ್ಗದ ಬಿ.ಎಚ್. ರಸ್ತೆಯ ಸೈನ್ಸ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಎಜಾಕ್ಸ್ ಸಿಎಸ್ಆರ್ ನಿಧಿಯಡಿ ಸೈನ್ಸ್ ಮೈದಾನದ ಕರ್ನಾಟಕ ಪಬ್ಲಿಕ್ ಶಾಲೆಗೆ ನಿರ್ಮಿಸಲಾಗುತ್ತಿರುವ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಸಚಿವ ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ನಂತರದ ಸಮಯವನ್ನು ಕಾಯ್ದಿರಿಸಲಾಗಿದ್ದು, ಸೊರಬದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆ.23ರ ಭಾನುವಾರ ಬೆಳಿಗ್ಗೆ 8.15ಕ್ಕೆ ಆನವಟ್ಟಿಯ ಕೆಪಿಎಸ್ ಶಾಲೆಯ ಆವರಣದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದಾರೆ.
ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆಪಿಎಸ್ ಶಾಲೆಯ ಆವರಣದಲ್ಲಿ ರಂಗಮಂದಿರ ನಿರ್ಮಾಣ, ನೇರಲಗಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮೀಪ ಸಮುದಾಯ ಶೌಚಾಲಯ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಆನವಟ್ಟಿಯ ಕೆಪಿಎಸ್ ಶಾಲೆಯ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 8.30ಕ್ಕೆ ಆನವಟ್ಟಿಯ ಪ್ರವಾಸಿ ಮಂದಿರದಲ್ಲಿ ಗ್ರಾಮ ಪಂಚಾಯಿತಿವಾರು ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ.
ಆ.23ರಂದು ಮಧ್ಯಾಹ್ನ 3 ಗಂಟೆಗೆ ಆನವಟ್ಟಿಯಿಂದ ಹೊರಡುವ ಸಚಿವ ಮಧು ಬಂಗಾರಪ್ಪ ಅವರು ದಾವಣಗೆರೆ–ಚಿತ್ರದುರ್ಗ–ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ರಾತ್ರಿ 9 ಗಂಟೆಗೆ ಬೆಂಗಳೂರಿನ ಕೇಂದ್ರ ಸ್ಥಾನಕ್ಕೆ ತಲುಪಲಿದ್ದಾರೆ ಎಂದು ಸಚಿವರ ಅಧಿಕೃತ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.
