ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ಭದ್ರಾವತಿ ಅರಣ್ಯ ವಿಭಾಗದ ತರೀಕೆರೆ ವಲಯದ ಹುಣಸಘಟ್ಟ ಶಾಖೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶ್ರೀಗಂಧದ ಮರ (sandalwood) ಕಡಿದ ಆರೋಪದ ಮೇಲೆ ಆರು ಮಂದಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಹುಣಸಘಟ್ಟ ಶಾಖೆ ವ್ಯಾಪ್ತಿಯ ಸಾವೆಮರಡಿ ಕಾವಲ್ ಗ್ರಾಮದ ಸರ್ವೆ ನಂಬರ್ 2ರ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ನಡೆದ ಘಟನೆಯ ಪೂರ್ತಿ ವಿವರ
ಅರಣ್ಯ ಪ್ರದೇಶದಲ್ಲಿದ್ದ ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಲು ಕೆಲವರು ಮುಂದಾಗಿದ್ದಾರೆ ಎಂಬ ಮಾಹಿತಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೊರೆತಿತ್ತು. ಮಾಹಿತಿಯ ಆಧರಿಸಿ ವಲಯ ಅರಣ್ಯಾಧಿಕಾರಿ ಹರೀಶ್ ಕೆ.ಆರ್. ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಗೆ ಮುಂದಾಗಿದ್ರು. ಈ ವೇಳೆ ಅರಣ್ಯ ಪ್ರದೇಶದಲ್ಲಿ ಗಂಧದ ಮರ ಕಡಿದಿರುವುದು ಪತ್ತೆಯಾಗಿದೆ.
ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಅರಣ್ಯ ಇಲಾಖೆ ಆರೋಪಿಗಳ ವಿರುದ್ಧ ಅರಣ್ಯ ಇಲಾಖೆಯಿಂದ ಅರಣ್ಯ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅರಣ್ಯ ಇಲಾಖೆಯ ದಾಖಲೆಗಳ ಪ್ರಕಾರ, ಘಟನೆಗೆ ಸಂಬಂಧಿಸಿದಂತೆ 2026–27ನೇ ಸಾಲಿನ ಅರಣ್ಯ ಮೊಕದ್ದಮೆ ದಾಖಲಿಸಲಾಗಿದೆ. ಬಂಧಿತ ಆರು ಮಂದಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದಂತೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಶ್ರೀಗಂಧದ ಅಕ್ರಮ ಕಡಿತ ಹಾಗೂ ಸಾಗಾಟ ತಡೆಯಲು ಅರಣ್ಯ ಇಲಾಖೆ ನಿರಂತರವಾಗಿ ನಿಗಾ ವಹಿಸುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
