ಶಿವಮೊಗ್ಗ ಮಲೆನಾಡುಟುಡೆ ನ್ಯೂಸ್ : ಶಿವಮೊಗ್ಗ ಜಿಲ್ಲೆಗೆ ಹಿಂದೂ ಮುಖಂಡ ಶರಣ್ ಪಂಪ್ವೆಲ್ ಅವರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿರುವುದನ್ನು ಖಂಡಿಸಿ ನಗರದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಗೋಪಿ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಗೋಹತ್ಯೆ ಹಾಗೂ ಗೋಸಾಗಾಟವನ್ನು ತಡೆಯುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ, ಅಕ್ರಮ ಗೋ ಕಳ್ಳತನವನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತರ ಮೇಲೆಯೇ ಹಲ್ಲೆ ನಡೆಯುತ್ತಿದ್ದರೂ ಜಿಲ್ಲಾಡಳಿತ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಗೋಪಿ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಏಕಾಏಕಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ದಿಕ್ಸೂಚಿ ಭಾಷಣ ಮಾಡಲು ಆಗಮಿಸುತ್ತಿದ್ದ ಹಿಂದೂ ಮುಖಂಡರನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ ಮತ್ತು ಪೊಲೀಸರು ಗೋಕಳ್ಳರಿಗೆ ಬೆಂಬಲವಾಗಿ ನಿಂತು ಹಿಂದೂ ಕಾರ್ಯಕರ್ತರ ಮೇಲೆಯೇ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಕಾರ್ಯಕರ್ತರು ದೂರಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಗೋಭಕ್ಷಕರಿಗೆ ರಕ್ಷಣೆ ನೀಡುತ್ತಿದೆ ಎಂದು ಕಿಡಿಕಾರಿದರು.
