ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ದಾವಣಗೆರೆ ಮತ್ತು ಚನ್ನಗಿರಿ ತಾಲ್ಲೂಕುಗಳ ಜನರು ಹಾಗೂ ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಾಗಿ ಭದ್ರಾ ಬಲದಂಡೆ ನಾಲೆಯಲ್ಲಿ (Bhadra Right Bank Canal) ನೀರು ಹರಿಸಲು ನಿರ್ಧರಿಸಲಾಗಿದೆ. ಪ್ರಾದೇಶಿಕ ಆಯುಕ್ತರ ಆದೇಶದಂತೆ, 01.09.2026ರಿಂದ 10.09.2026ರವರೆಗೆ ಪ್ರತಿದಿನ 1500 ಕ್ಯೂಸೆಕ್ಸ್ ಪ್ರಮಾಣದಲ್ಲಿ ಭದ್ರಾ ಬಲದಂಡೆ ನಾಲೆಯ ಮೂಲಕ ಇಂಪೌಂಡ್ ರಿಸರ್ವಿಯರ್ಗಳಿಗೆ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ನಾಲೆಯಲ್ಲಿ ಹರಿಸಲಾಗುವ ನೀರನ್ನು ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕು.
- ಯಾವುದೇ ಕಾರಣಕ್ಕೂ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಈ ನೀರನ್ನು ಉಪಯೋಗಿಸಬಾರದು ಎಂದು ಸ್ಪಷ್ಟಪಡಿಸಲಾಗಿದೆ.
- ಈ ಅವಧಿಯಲ್ಲಿ ರೈತರು ನಾಲೆಯಿಂದ ಅಕ್ರಮವಾಗಿ ನೀರು ಎತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
- ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಿಡುಗಡೆ ಮಾಡುವ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸಬಾರದು ಎಂದು ಸೂಚಿಸಲಾಗಿದೆ.
- ನಾಲೆಯಲ್ಲಿ ನೀರು ಹರಿಯುವ ಅವಧಿಯಲ್ಲಿ ಸಾರ್ವಜನಿಕರು ಕಾಲುವೆಯಲ್ಲಿ ತಿರುಗಾಡಬಾರದು. ದನ-ಕರುಗಳನ್ನು ಕಾಲುವೆಗೆ ಇಳಿಸದಂತೆಯೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.
ದಾವಣಗೆರೆ ಮತ್ತು ಚನ್ನಗಿರಿ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ. ನೀರು ಹರಿಸುವ ಅವಧಿಯಲ್ಲಿ ಸಾರ್ವಜನಿಕರು ಹಾಗೂ ರೈತರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿ ಮನವಿ ಮಾಡಿದೆ.
