ಶಿವಮೊಗ್ಗ: ಪೋಷಕರು ದೇವಸ್ಥಾನಕ್ಕೆ ತೆರಳಿದ್ದ ವೇಳೆ 9 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗೋಪಿಸೆಟ್ಟಿ ಕೊಪ್ಪದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಸೃಷ್ಟಿ ಎಂದು ಗುರುತಿಸಲಾಗಿದೆ. ಈಕೆ ಶಿವಮೊಗ್ಗದ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರವಾಗಿದ್ದರಿಂದ ಸೃಷ್ಟಿಯನ್ನು ಮನೆಯಲ್ಲಿಯೇ ಬಿಟ್ಟು ತಂದೆ ತಾಯಿ ಇಬ್ಬರೂ ರಾಯರ ಆರಾಧನೆಗೆ ತೆರಳಿದ್ದರು. ಪೂಜೆ ಮುಗಿಸಿ ಮನೆಗೆ ಬಂದಾಗ ಸೃಷ್ಟಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪೋಷಕರು ಓದು ಓದು ಎಂದು ಪದೇ ಪದೆ ಹೇಳುತ್ತಿದ್ದಿದ್ದೇ ಆತ್ಮಹತ್ಯೆಗೆ ಕಾರಣ ಎಂಬ ವಿಚಾರ ಪ್ರಾಥಮಿಕ ಮಾಹಿತಿ ಹಾಗೂ ಡೆತ್ ನೋಟ್ನಿಂದ ಮೇಲ್ನೋಟಕ್ಕೆ ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
