ಮಲೆನಾಡು ಟುಡೆ ಸುದ್ದಿ / ಸಾಗರ / ಸಾಗರ ತಾಲ್ಲೂಕಿನ ಖಂಡಿಕಾ ಗ್ರಾಮದಲ್ಲಿ ಭಾನುವಾರ ಮನೆಯಲ್ಲಿ ಒಬ್ಬರೇ ಇದ್ದ ಗೀತಾ ಎಂಬ ಮಹಿಳೆ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿ, ಅವರ ಕತ್ತಿನಲ್ಲಿದ್ದ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಿನ್ನೆ ದಿನ ವರದಿಯಾಗಿದೆ.
ಸ್ಥಳೀಯ ವರದಿಗಾರರ ಪ್ರಕಾರ, ಗೀತಾ ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ ಆರೋಪಿ ಅಕ್ರಮವಾಗಿ ಮನೆಯೊಳಗೆ ಪ್ರವೇಶಿಸಿದ್ದಾನೆ. ಬಳಿಕ ಅವರ ಕತ್ತಿನಲ್ಲಿದ್ದ ಬಂಗಾರದ ಸರ ಕದಿಯಲು ಮುಂದಾಗಿದ್ದ ಎಂದು ತಿಳಿದುಬಂದಿದೆ.
ಆರೋಪಿಯ ಕೃತ್ಯಕ್ಕೆ ಗೀತಾ ಪ್ರತಿರೋಧ ವ್ಯಕ್ತಪಡಿಸಿದಾಗ, ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ ಆರೋಪಿ, ಅವರ ಕತ್ತಿನಲ್ಲಿದ್ದ ಬಂಗಾರದ ಸರ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.
ಹಲ್ಲೆಯಿಂದ ಗಾಯಗೊಂಡ ಗೀತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (Sagara rural station limit) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
