ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ : ವಿಶ್ವೇಶ್ವರಯ್ಯ ಜಲನಿಗಮವು ನಾಳೆಯಿಂದ (ಸೆಪ್ಟೆಂಬರ್ 6) ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯ ಮೂಲಕ ಗೋನೂರು ಕೆರೆಯವರೆಗೆ ಪ್ರಾಯೋಗಿಕವಾಗಿ ನೀರು ಹರಿಸಲು ತೀರ್ಮಾನಿಸಿದೆ.
ಈ ನೀರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಅಜ್ಜಂಪುರ ಹಾಗೂ ಚಿತ್ರದುರ್ಗ ಶಾಖಾ ಕಾಲುವೆಯ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಚಿತ್ರದುರ್ಗ ಮತ್ತು ಚಳ್ಳಕೆರೆ ತಾಲೂಕುಗಳ ಮೂಲಕ ಹಾದು ಅಂತಿಮವಾಗಿ ಗೋನೂರು ಕೆರೆಯನ್ನು ತಲುಪಲಿದೆ.
ನೀರು ಹರಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ಓಡಾಡುವುದು, ಜಾನುವಾರುಗಳನ್ನು ಬಿಡುವುದು, ಕಾಲುವೆಗಳಲ್ಲಿ ಈಜಾಡುವುದು ಸೇರಿದಂತೆ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ.
ಸರ್ಕಾರದ ಸೂಚನೆಗಳನ್ನು ಉಲ್ಲಂಘಿಸುವುದು, ನೀರಾವರಿ ಕಾಲುವೆ ಅಥವಾ ಕಟ್ಟಡಗಳಿಗೆ ಹಾನಿ ಮಾಡುವುದು ಹಾಗೂ ಅನಧಿಕೃತವಾಗಿ ಪಂಪ್ಸೆಟ್ ಅಳವಡಿಸಿ ನೀರು ಎತ್ತುವುದು ನೀರಾವರಿ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಇದನ್ನು ಉಲ್ಲಂಘಿಸಿದವರ ವಿರುದ್ಧ ನೀರಾವರಿ ಕಾಯ್ದೆ ಮತ್ತು ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಬಿ.ಆರ್.ಪ್ರಾಜೆಕ್ಟ್ನ ವಿಶ್ವೇಶ್ವರಯ್ಯ ಜಲನಿಗಮ, ಭದ್ರಾ ಮೇಲ್ದಂಡೆ ಯೋಜನಾ ವೃತ್ತದ ಸೂಪರಿಂಟೆಂಡೆಂಟ್ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
