ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯ ತೀರ್ಥಹಳ್ಳಿ ಹಾಗೂ ಆನಂದಪುರ ಭಾಗಗಳಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ (Road Accidents in Shivamogga) 27 ವರ್ಷದ ಯುವಕ ಹಾಗೂ 48 ವರ್ಷದ ಉದ್ಯಮಿ ಮೃತಪಟ್ಟಿದ್ದಾರೆ.
ತೀರ್ಥಹಳ್ಳಿಯಲ್ಲಿ ಖಾಸಗಿ ಬಸ್-ಬೈಕ್ ಡಿಕ್ಕಿ; ಗಣೇಶ ಸಾವು
ತೀರ್ಥಹಳ್ಳಿಯ ರಂಜದಕಟ್ಟೆ ಕ್ರಾಸಲ್ಲಿ ನಿನ್ನೆ ದಿನ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹಳ್ಳಿಬೈಲ್ನ ಗಣೇಶ (27) ಮೃತಪಟ್ಟಿದ್ದಾರೆ. ಗಣೇಶ ತೀರ್ಥಹಳ್ಳಿಯ ಗ್ಯಾರೇಜ್ ಒಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ರಂಜದಕಟ್ಟೆ ತಿರುವಿನ ಬಳಿ ಓವರ್ಟೇಕ್ ಮಾಡಲು ಮುಂದಾದ ಸಂದರ್ಭದಲ್ಲಿ ಖಾಸಗಿ ಬಸ್ಗೆ ಬೈಕ್ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಹೇಳಿದ ಮಾಹಿತಿ ಮಲೆನಾಡುಟುಡೆಗೆ ಲಭ್ಯವಾಗಿದೆ.
ಘಟನೆಯಲ್ಲಿ ಗಣೇಶ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಚಿಕಿತ್ಸೆಗಾಗಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆನಂದಪುರದಲ್ಲಿ ಅಪಘಾತ; ಉದ್ಯಮಿ ಜಾವಿದ್ ನಿಧನ
ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ, ಆನಂದಪುರದಿಂದ ಶಿಕಾರಿಪುರಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಉದ್ಯಮಿ ಜಾವಿದ್ (48) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ಗುರುವಾರ ಜಾವಿದ್ ಬೈಕ್ ಆನಂದಪುರದಿಂದ ಶಿಕಾರಿಪುರದ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿತ್ತು.
ಗಾಯಗೊಂಡಿದ್ದ ಅವರನ್ನು ಮೊದಲು ಆನಂದಪುರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದರೆ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಜಾವಿದ್ ಮೃತಪಟ್ಟಿದ್ದಾರೆ. ಜಾವಿದ್ ಉದ್ಯಮಿಯಾಗಿದ್ದು, ಸುಮಾರು ಎರಡು ತಿಂಗಳ ಹಿಂದಷ್ಟೇ ಹಜ್ ಯಾತ್ರೆ ಮುಗಿಸಿ ವಾಪಸಾಗಿದ್ದರು.
