ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ನಗರದಲ್ಲಿ ಇಂದು ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಮುಖ್ಯವಾಗಿ ನಗರದ ಶಾಂತಿಗಾಗಿ ನಡಿಗೆ ಸಮಿತಿಯಿಂದ ನಮ್ಮ ನಡಿಗೆ ಶಾಂತಿಯ ಕಡೆಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮತ್ತೊಂದೆಡೆ ಡಾ. ಶರತ್ ಮರಿಯಪ್ಪ ಫೌಂಡೇಶನ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಕಾರ್ಯಾಗಾರ ನಡೆಯಲಿದೆ.
ಮಧ್ಯಾಹ್ನ 3ಕ್ಕೆ ನಮ್ಮ ನಡಿಗೆ ಶಾಂತಿಯ ಕಡೆಗೆ
ನಗರದ ಶಾಂತಿಗಾಗಿ ನಡಿಗೆ ಸಮಿತಿಯಿಂದ ಆಯೋಜಿಸಿರುವ ‘ನಮ್ಮ ನಡಿಗೆ ಶಾಂತಿಯ ಕಡೆಗೆ’ ಕಾರ್ಯಕ್ರಮ ಇಂದು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ.ನಗರದ ಟಿ. ಸೀನಪ್ಪಶೆಟ್ಟಿ ವೃತ್ತದಿಂದ ನಡಿಗೆ ಆರಂಭವಾಗಿ ರಾಮಣ್ಣ ಶ್ರೇಷ್ಠಿ ಪಾರ್ಕ್ವರೆಗೆ ಸಾಗಲಿದೆ. ನಡಿಗೆ ಮುಕ್ತಾಯಗೊಂಡ ಬಳಿಕ ರಾಮಣ್ಣ ಶ್ರೇಷ್ಠಿ ಪಾರ್ಕ್ನಲ್ಲಿ ಸಾರ್ವಜನಿಕ ಶಾಂತಿ ಸಭೆ ನಡೆಯಲಿದೆ. ಈ ಶಾಂತಿ ಸಭೆಯಲ್ಲಿ ವಿವಿಧ ಧರ್ಮಗುರುಗಳು, ರಾಜಕೀಯ ಹಾಗೂ ಸಾಮಾಜಿಕ ಮುಖಂಡರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಕುವೆಂಪು ರಂಗಮಂದಿರದಲ್ಲಿ ಉಚಿತ ತರಬೇತಿ
ಇಂದು ಬೆಳಗ್ಗೆ 10 ಗಂಟೆಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಡಾ. ಶರತ್ ಮರಿಯಪ್ಪ ಫೌಂಡೇಶನ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.ಕಾರ್ಯಾಗಾರದಲ್ಲಿ ಸಾಧನಾ ಅಕಾಡೆಮಿಯ ಬಿ. ಮಂಜುನಾಥ್, ಸ್ಪರ್ಧಾ ಅರಿವು ಅಕಾಡೆಮಿಯ ಪಿ.ವಿ. ಭೈರಪ್ಪ ಹಾಗೂ ಪಿಎಸ್ಐ ಕಿಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.
ಸೆ.12ರಂದು ಪಿಯು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ
ಇದರೊಂದಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 12ರಂದು ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ. ಅಂದು ಮಧ್ಯಾಹ್ನ 12 ಗಂಟೆಗೆ ಸಂಘದ ಸಭಾಂಗಣದಲ್ಲಿ ‘ನಾಡಿನ ಅಭಿವೃದ್ಧಿಯ ಹರಿಕಾರ ಡಾ. ಸರ್ ಎಂ. ವಿಶ್ವೇಶ್ವರಯ್ಯ’ ವಿಷಯದ ಕುರಿತು ಭಾಷಣ ಸ್ಪರ್ಧೆ ನಡೆಯಲಿದೆ.ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಯ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕು. ಒಂದು ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧಿಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಭಾಷಣ ಮಂಡಿಸಬಹುದು.ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವವರಿಗೆ ₹3,000, ದ್ವಿತೀಯ ಸ್ಥಾನಕ್ಕೆ ₹2,000 ಹಾಗೂ ತೃತೀಯ ಸ್ಥಾನ ಪಡೆಯುವವರಿಗೆ ₹1,000 ನಗದು ಬಹುಮಾನ ನೀಡಲಾಗುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್ ತಿಳಿಸಿದ್ದಾರೆ.
