B kSangameshwar / ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಅವಕಾಶ ನಿರಾಕರಿಸಿರುವುದಕ್ಕೆ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ವರ್ ಅಸಮಾಧಾನ ಹೊರಹಾಕಿದ್ದಾರೆ. ಅವರ ಅಸಮಾಧಾನ ಇವತ್ತಿನ ದಿನದ ಬೆಳವಣಿಗೆಯಲ್ಲಿ ವಿಶೇಷವಾಗಿ ಗಮನ ಸೆಳೆದಿದೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಕೆ ಸಂಗಮೇಶ್ ನೇರವಾಗಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಗೆ ಬೆಲೆ ಇಲ್ಲದಂತಾಗಿದೆ ಅಂತಾ ಆರೋಪಿಸಿದ್ರು. ಈ ಹಿಂದೆ ಸಚಿವರಾಗಿದ್ದವರಿಗೇ ಮರಳಿ ಸಚಿವ ಸ್ಥಾನ ನೀಡಲಾಗಿದ್ದು, ನಾಯಕರ ಮನೆ ಆಸ್ತಿಯಂತೆ ತಮಗೆ ಬೇಕಾದವರಿಗೆ ಹಾಗೂ ದೆಹಲಿಗೆ ತೆರಳಿ ಹೈಕಮಾಂಡ್ ಕಿವಿಯೂದುವವರಿಗೆ ಮಾತ್ರ ಮಂತ್ರಿಗಿರಿ ನೀಡಲಾಗುತ್ತಿದೆ ಅಂತಾ ತಮ್ಮದೆ ಶೈಲಿಯಲ್ಲಿ ಮಾತನಾಡಿದ್ರು.
ಇಷ್ಟೆ ಅಲ್ಲದೆ ಮುಂದುವರಿದು, ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದಿರುವುದರಿಂದ ಕಾಂಗ್ರೆಸ್ ನಾಯಕರಿಗೆ ಅಹಂಕಾರ ಬಂದಿದ್ದು, 10 ಮಂದಿ ಶಾಸಕರು ರಾಜೀನಾಮೆ ನೀಡಿದರೂ ಸರ್ಕಾರಕ್ಕೆ ಏನೂ ಆಗುವುದಿಲ್ಲ ಎಂಬ ಭ್ರಮೆಯಲ್ಲಿದ್ದಾರೆ. ಪಕ್ಷಕ್ಕೆ ತಕ್ಕ ಪಾಠ ಕಲಿಸುವ ಕೆಲಸವನ್ನು ನಾವು ಮಾಡುತ್ತೇವೆ ಅಂಥಾ ವಾರ್ನಿಂಗ್ ಡೈಲಾಗ್ ಮುಂದಿಟ್ರು
ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಹಿರಿಯ ಶಾಸಕರನ್ನು ಕಡೆಗಣಿಸಲಾಗಿದೆ, ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿ ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ತೀನಿ. ಈಗಾಗಲೇ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ನಾಳೆ ಬೆಳಿಗ್ಗೆ 10 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಎಂದಿದ್ದಾರೆ. ಸಂಪುಟ ವಿಸ್ತರಣೆಯಿಂದ ನೊಂದಿರುವ ಶಾಸಕರೆಲ್ಲರೂ ಒಂದೇ ಕಡೆ ಸಭೆ ಸೇರಿ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳಲಿದ್ದೇವೆ ಅಂಥಾ ತಿಳಿಸಿದ್ರು.
