ಮಲೆನಾಡು ಟುಡೆ ಸುದ್ದಿ / ಸಾಗರ /ತಾಲ್ಲೂಕಿನ ಬಳಸಗೋಡು ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಅರ್ಜುನ್ (19) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಳೆದ ಬುಧವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಇಂದು ಮಾಹಿತಿ ಲಭ್ಯವಾಗಿದೆ.
ಅರ್ಜುನ್ ಶಾಮಿಯಾನ ಡೆಕೋರೇಷನ್ ವೃತ್ತಿ ನಿರ್ವಹಿಸುತ್ತಿದ್ದರು. ಬುಧವಾರ ಬೆಳಿಗ್ಗೆ ಮನೆಯಿಂದ ಹೊರಡುವಾಗ ಆನಂದಪುರಂಗೆ ಡೆಕೋರೇಷನ್ ಕೆಲಸಕ್ಕಾಗಿ ಹೋಗುತ್ತಿರುವುದಾಗಿ ತಿಳಿಸಿದ್ದರು. ಬೈಕಿನಲ್ಲಿ ಡೆಕೋರೇಷನ್ಗೆ ಸಂಬಂಧಿಸಿದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದ ಅರ್ಜುನ್, ಅವುಗಳನ್ನು ಆನಂದಪುರಂನಲ್ಲಿ ಇಳಿಸಿದ್ದರು. ಅಲ್ಲಿಂದ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಬಳಸಗೋಡು ಸಮೀಪ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.
ಕಾರು ಚಾಲಕ ಮಹ್ಮದ್ ಶರೀಫ್ ಅಜಾಗರೂಕತೆಯಿಂದ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಆರೋಪಿಸಿ ಮೃತ ಅರ್ಜುನ್ ಅವರ ತಂದೆ ವೆಂಕಟೇಶ್ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.
