ಶಿವಮೊಗ್ಗ್ಗ : ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ವಿರೋಧಿ ಕಾಯ್ದೆಯನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಸರ್ಕಾರದ ಈ ಮಸೂದೆಯು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ಒಂದು ವರ್ಗವನ್ನು ಓಲೈಸುವ ಪ್ರಯತ್ನ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ: ಹಕ್ಕುಪತ್ರ ಮತ್ತು ಇ-ಸ್ವತ್ತುಗಳಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ 15 ದಿನ ಗಡುವು…
ನಗರದ ಶಿವಪ್ಪ ನಾಯಕ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ, ಸದನದಲ್ಲಿ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಿ ಈ ವಿಧೇಯಕವನ್ನು ಅಂಗೀಕರಿಸಲಾಗಿದೆ. ಕಾಂಗ್ರೆಸ್ನ ತಪ್ಪುಗಳನ್ನು ಪ್ರಶ್ನಿಸಿದರೆ ಅದನ್ನು ದ್ವೇಷ ಭಾಷಣ ಎಂದು ಹಣೆಪಟ್ಟಿ ಕಟ್ಟುವುದು ಪ್ರಜಾಪ್ರಭುತ್ವ ವಿರೋಧಿ ನಡೆ” ಎಂದು ಗುಡುಗಿದರು.
ಸತ್ಯ ಸಂಗತಿಗಳನ್ನು ಹೇಳುವುದು ಅಪರಾಧವಾಗುತ್ತದೆಯೇ ಎಂದು ಪ್ರಶ್ನಿಸಿದ ಶಾಸಕರು, ದೇಶ ವಿಭಜನೆಯ ಇತಿಹಾಸ, ಭಯೋತ್ಪಾದನಾ ಚಟುವಟಿಕೆಗಳಲ್ಲಿ ಮುಸ್ಲಿಂ ಯುವಕರ ಭಾಗೀದಾರಿಕೆ ಮತ್ತು ಶಿವಮೊಗ್ಗದ ತುಂಗಾ ತೀರದ ಟ್ರಯಲ್ ಬ್ಲಾಸ್ಟ್ ವಿಚಾರಗಳನ್ನು ಪ್ರಸ್ತಾಪಿಸಿದರೆ ಕಾಂಗ್ರೆಸ್ ಅದನ್ನು ದ್ವೇಷ ಎಂದು ಕರೆಯುತ್ತದೆ. ಸತ್ಯವನ್ನು ಅರಗಿಸಿಕೊಳ್ಳಲಾಗದ ಸರ್ಕಾರ ಈ ರೀತಿಯ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ ಎಂದು ಕಿಡಿಕಾರಿದರು.
ಗೋಹತ್ಯೆ ತಡೆಗೆ ಕ್ರಮ ಕೈಗೊಳ್ಳದ ಸರ್ಕಾರ, ಗೋವುಗಳ ರಕ್ಷಣೆಗಾಗಿ ಧ್ವನಿ ಎತ್ತುವವರನ್ನು ಜೈಲಿಗಟ್ಟಲು ಈ ಕಾನೂನನ್ನು ಬಳಸುವ ಸಂಚು ರೂಪಿಸಿದೆ. ಇದು 1975ರ ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸುತ್ತಿದೆ ಎಂದು ಅವರು ಆರೋಪಿಸಿದರು. ಟಿಪ್ಪು ಮತ್ತು ಹೈದರ್ ಅಲಿಯ ಕಾಲದ ಆಕ್ರಮಣಗಳ ಬಗ್ಗೆ ಮಾತನಾಡಿದರೂ ಈ ಕಾಯ್ದೆಯಡಿ ಪ್ರಕರಣ ದಾಖಲಿಸುವ ಹುನ್ನಾರ ನಡೆದಿದೆ ಎಂದರು.
ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ರಾಜ್ಯಪಾಲರಿಗೆ ಈ ಮಸೂದೆಯನ್ನು ಜಾರಿಗೆ ತರದಂತೆ ಒತ್ತಾಯಿಸಿ ಮನವಿ ಸಲ್ಲಿಸಿತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್, ಜಿಲ್ಲಾಧ್ಯಕ್ಷ ಜಗದೀಶ್, ಶಿಂಗನಹಳ್ಳಿ ಸುರೇಶ್, ದೀನ್ ದಯಾಳ್, ಮೋಹನ್ ರೆಡ್ಡಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು.
BJP Protests in Shimoga Against Congress Government
