New Mandli / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮಳೆ ಹೆಚ್ಚಾದಂತೆ ಅಪಾಯಗಳು ಹೆಚ್ಚಾಗುತ್ತವೆ. ಇದಕ್ಕೆ ಪೂರಕ ಎಂಬಂತೆ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿರುವ ಮನೆಯೊಂದು ಕುಸಿದುಬಿದ್ದಿದೆ.
ಈ ವಿಚಾರ ತಿಳಿದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ ಸ್ಥಳಕ್ಕೆ ತೆರಳಿ ಆದ ಹಾನಿಯ ಬಗ್ಗೆ ಪರಿಶೀಲನೆ ನಡೆಸಿದರು, ಅಲ್ಲದೆ ಸ್ಥಳದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ, ಸಂತ್ರಸ್ತ ಕುಟುಂಬಕ್ಕೆ ತಕ್ಷಣವೇ ಪರಿಹಾರಕ್ಕೆ ಎರ್ಪಾಡು ಮಾಡುವಂತೆ ಸೂಚಿಸಿದರು.
ಸಾರ್ವಜನಿಕರು ಎದುರಿಸುತ್ತಿರುವ ದೈನಂದಿನ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವುದು ಹಾಗೂ ನೈಸರ್ಗಿಕ ವಿಕೋಪಗಳಿಂದ ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ಮಾನವೀಯತೆಯ ಆಧಾರದ ಮೇಲೆ ನೆರವಾಗುವುದು ನಮ್ಮ ಕರ್ತವ್ಯವಾಗಿದೆ
ಎಸ್.ಎನ್. ಚನ್ನಬಸಪ್ಪ (ಚೆನ್ನಿ) , ಶಿವಮೊಗ್ಗ ನಗರ ಶಾಸಕ
ಇನ್ನೂ ಇದೇ ವೇಳೆ ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ವಿತರಿಸುವ ಕಾರ್ಯದಲ್ಲಿ ತಡ ಆಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದ ಶಾಸಕರು ಪರಿಹಾರ ವಿತರಣೆಯ ಪ್ರಕ್ರಿಯೆಗಳನ್ನು ತುರ್ತಾಗಿ ಪೂರ್ಣಗೊಳಿಸಿ, ಬಾಧಿತ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರ ದೊರಕುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಅಂತಾ ಸೂಚಿಸಿದರು.
ಈ ವೇಳೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ್, ಎಸ್ಸಿ ಮೋರ್ಚಾ ನಗರ ಅಧ್ಯಕ್ಷ ವಿಜಯೇಂದ್ರ, ಕಾರ್ಯದರ್ಶಿ ರಾಘವೇಂದ್ರ, ಮಹಾನಗರ ಪಾಲಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
