ಮಲೆನಾಡು ಟುಡೆ ಸುದ್ದಿ / ಚಿಕ್ಕಮಗಳೂರು / ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳದ ಬಳಿಕ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದ ವ್ಯಕ್ತಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಚಿಕ್ಕಮಗಳೂರಿನ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ (Chikkamagaluru Court). ಈ ಕುರಿತಾಗಿ ಚಿಕ್ಕಮಗಳೂರಿನ ವರದಿಗಾರ ನೀಡಿರುವ ವರದಿ ವಿವರ ಹೀಗಿದೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೊನ್ನಗುಂಡಿ ಗ್ರಾಮದ ಸದಾನಂದ ಜೀವಾವಧಿ ಶಿಕ್ಷೆಗೆ ಗುರಿಯಾದ ವ್ಯಕ್ತಿ.
ಈತ ಪತ್ನಿ ಯಶೋದಾ ಮತ್ತು ಪುತ್ರನೊಂದಿಗೆ ಹೊನ್ನಗುಂಡಿ ಗ್ರಾಮದಲ್ಲಿ ವಾಸವಾಗಿದ್ದ. ಮದ್ಯ ಸೇವಿಸಿ ಮನೆಗೆ ಬಂದು ಪತ್ನಿ ಯಶೋದಾ ಅವರೊಂದಿಗೆ ಆಗಾಗ ಜಗಳ ಮಾಡುತ್ತಿದ್ದ . 2022ರ ನವೆಂಬರ್ 15ರಂದು ಬೆಳಗ್ಗೆ ದಂಪತಿ ನಡುವೆ ಮತ್ತೆ ಜಗಳ ನಡೆದಿದ್ದು, ಈ ವೇಳೆ ಸದಾನಂದ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ ಎಂದು ಆರೋಪಿಸಲಾಗಿತ್ತು. ಅದೇ ದಿನ ರಾತ್ರಿ ಪುತ್ರ ಮಲಗಿದ ನಂತರ ಸದಾನಂದ ಪತ್ನಿ ಯಶೋದಾ ಅವರ ಕತ್ತು ಹಿಸುಕಿ ಕೊಲೆ ಮಾಡಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿತ್ತು. ಘಟನೆಗೆ ಸಂಬಂಧಿಸಿದಂತೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಜಯಪುರ ಠಾಣೆ ಪೊಲೀಸರು ಸದಾನಂದನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕಮಗಳೂರಿನ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿತು. ವಿಚಾರಣೆಯ ವೇಳೆ ಸದಾನಂದನ ವಿರುದ್ಧದ ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಪ್ರವೀಣ್ ಕುಮಾರ್ ಅವರು ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಸೋಮವಾರ ತೀರ್ಪು ಪ್ರಕಟಿಸಿದರು. ಸರ್ಕಾರದ ಪರವಾಗಿ ಅಭಿಯೋಜಕಿ ಭಾವನ ವಾದ ಮಂಡಿಸಿದ್ದರು.
