ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಆರೋಗ್ಯ ಇಲಾಖೆ ಬೆಂಗಳೂರಿನಲ್ಲಿ ಗರಂ ಆದ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿಯು ಅಧಿಕಾರಿಗಳು ಎಚ್ಚರಗೊಂಡಿದ್ದಾರೆ. ಮೊನ್ನೆ ಎಸಿ ರೇಡ್ ನಿನ್ನೆ ಗಾಂಧಿ ಬಜಾರ್ನಲ್ಲಿ ಪ್ಲಾಸ್ಟಿಕ್ ವಿರುದ್ಧದ ರೇಡ್ ನ ನಂತರ ಇದೀಗ ಕೋಪ್ಟಾ ಕಾಯಿದೆ ಅಡಿ ದಾಳಿ ನಡೆಸಲಾಗಿದೆ. ಶಿವಮೊಗ್ಗ ನಗರದ ಮೀನಾಕ್ಷಿ ಭವನ ಸುತ್ತಮುತ್ತಲಿನ (Meenakshi Bhavan in Shivamogga) ಪ್ರದೇಶದಲ್ಲಿ ಇಂದು COTPA ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ದಾಳಿ ನಡೆಸಿತು.
ದಾಳಿ ವೇಳೆ COTPA ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 14 ಪ್ರಕರಣಗಳನ್ನು ದಾಖಲಿಸಲಾಗಿದ್ದು, ₹2,700 ದಂಡ ಸಂಗ್ರಹಿಸಲಾಗಿದೆ ಎಂದು ಶಿವಮೊಗ್ಗ ವಾರ್ತಾ ಇಲಾಖೆಯ ಮೂಲಕ ನೀಡಲಾಗಿರುವ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಪ್ರಕಟಣೆಯಲ್ಲಿರುವಂತೆ ಗಮನಿಸುವುದಾದರೆ, ಈ ಕಾರ್ಯಾಚರಣೆಯ ನೇತೃತ್ವವನ್ನು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರ್ ವಹಿಸಿದ್ದರು. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್, ಆರೋಗ್ಯ ಇಲಾಖೆ ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ದಾಳಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ COTPA ಕಾಯ್ದೆಯ ನಿಯಮಗಳ ಬಗ್ಗೆಯೂ ಅರಿವು ಮೂಡಿಸಲಾಯಿತು ಎಂದು ಉಲ್ಲೇಖಿಸಲಾಗಿದೆ.
