Eshwarappa ಶಿವಮೊಗ್ಗ: ಕಾಂಗ್ರೆಸ್ ಪಕ್ಷವು ಧರ್ಮದ ಆಧಾರದ ಮೇಲೆ ಮತದಾರರನ್ನು ವಿಭಜಿಸಿ, ಧರ್ಮಾಂದತೆ ಪ್ರಚೋದಿಸುವ ಮೂಲಕ ಚುನಾವಣೆ ಗೆಲ್ಲುವ ಕುತಂತ್ರ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಮಾಜಿ ಡಿಸಿಎಂಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೆಯಿತು ಇ-ಪೇಪರ್ ಓದಿ
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಾಮಮಾರ್ಗದ ಮೂಲಕ ಗೆಲ್ಲಲು ಯತ್ನಿಸುತ್ತಿದೆ ಎಂದು ಕಿಡಿಕಾರಿದರು. ಹಾಗೆಯೇ ಈ ಹಿಂದೆ ನಾನು ಬಾಷಣ ಮಾಡಿದ್ದಕ್ಕೆ ಧರ್ಮ ವಿರೋದಿ ಭಾಷಣ ಎಂದು ನನ್ನ ಮೇಲೆ 5 ಕೇಸ್ಗಳನ್ನು ದಾಖಲಿಸಿದ್ದರು. ಹಿಂದೂಗಳು ಒಂದಾದರೆ ಅದನ್ನು ಕೋಮುವಾದ ಎನ್ನುವವರು, ಮುಸ್ಲಿಮರಿಗೇ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿಯುವುದನ್ನು ಏನೆಂದು ಕರೆಯುತ್ತಾರೆ? ಎಂದು ಪ್ರಶ್ನಿಸಿದ ಈಶ್ವರಪ್ಪ, ಇದು ಸಮಾಜದಲ್ಲಿ ಒಡಕು ಮೂಡಿಸುವ ತಂತ್ರವಾಗಿದೆ ಎಂದರು.
ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದ ಜಮೀರ್ ಅಹಮದ್ ವಿರುದ್ಧ ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪದಡಿ ಕೇಸ್ ದಾಖಲಾಗಬೇಕು. ಅವರೊಂದಿಗೆ ಸಲೀಂ ಅಹಮದ್, ರಿಜ್ವಾನ್ ಅರ್ಷದ್ ಸೇರಿದಂತೆ ಪ್ರಚೋದನಾತ್ಮಕ ತಂತ್ರ ರೂಪಿಸುತ್ತಿರುವ ನಾಯಕರ ಮೇಲೆ ಭಾರತೀಯ ನ್ಯಾಯ ಸಂಹಿತೆ ಕಲಂ 196 ರ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಈ ಎಲ್ಲ ಬೆಳವಣಿಗೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಸಿಎಂ ಮತ್ತು ಡಿಸಿಎಂ ಕೂಡ ಇದಕ್ಕೆ ಜವಾಬ್ದಾರರು ಎಂದು ಅವರು ಅಭಿಪ್ರಾಯಪಟ್ಟರು.
ಹಿಂದೂಗಳ ರಕ್ಷಣೆ ಮತ್ತು ರಾಷ್ಟ್ರೀಯ ಚಿಂತನೆಯುಳ್ಳ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ನಿಮ್ಮ ಜವಾಬ್ದಾರಿ ನಿಭಾಯಿಸಿ ಎಂದು ಮನವಿ ಮಾಡಿದರು.
Eshwarappa Demands Case Against CM, DCM

