ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರಿಗೆ ಲೋಕಾಯುಕ್ತರ ಹೆಸರಿನಲ್ಲಿ ಸುಳ್ಳು ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ: ಮೂವರು ಅಪರಾಧಿಗಳಿಗೆ ತಲಾ 5 ವರ್ಷ ಕಠಿಣ ಜೈಲು ಶಿಕ್ಷೆ :ಆರೋಪಿಗಳು ಅಂತದ್ದೇನು ಮಾಡಿದ್ರು ಗೊತ್ತಾ..?
ಘಟನೆಯ ವಿವರ
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಕಂದಾಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಸ್.ಕೆ. ರಂಗಸ್ವಾಮಿ ಅವರಿಗೆ ಫೆಬ್ರವರಿ 2 ರಂದು ಅಪರಿಚಿತ ನಂಬರ್ನಿಂದ ವಾಟ್ಸ್ಆ್ಯಪ್ ಕರೆ ಬಂದಿತ್ತು. ಕರೆ ಮಾಡಿದ ವ್ಯಕ್ತಿಯು ತಾನು ಲೋಕಾಯುಕ್ತ ಇನ್ಸ್ಪೆಕ್ಟರ್ ರವಿಪ್ರಕಾಶ್ ಎಂದು ಪರಿಚಯಿಸಿಕೊಂಡಿದ್ದನು. ರಂಗಸ್ವಾಮಿ ಅವರ ವಿರುದ್ಧ ಭ್ರಷ್ಟಾಚಾರದ ದೂರುಗಳಿದ್ದು, ಆ ಪ್ರಕರಣವನ್ನು ಮುಕ್ತಾಯಗೊಳಿಸಲು 50,000 ರೂಪಾಯಿ ನೀಡುವಂತೆ ಬೇಡಿಕೆಯಿಟ್ಟಿದ್ದನು. ಒಂದು ವೇಳೆ ಹಣ ನೀಡದಿದ್ದರೆ ಪ್ರಕರಣ ದಾಖಲಿಸಿ ಜೈಲಿಗೆ ಕಳಿಸುವುದಾಗಿ ಅಧಿಕಾರಿ ರಂಗಸ್ವಾಮಿ ಅವರಿಗೆ ಬೆದರಿಕೆ ಹಾಕಲಾಗಿತ್ತು.
ಈ ಕರೆ ಬಂದ ತಕ್ಷಣ ರಂಗಸ್ವಾಮಿ ಅವರು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಕೂಡಲೇ ಎಚ್ಚೆತ್ತ ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿಯೊಂದಿಗೆ ತೆರಳಿ ಕೋಟೆ ಠಾಣೆಗೆ ದೂರು ನೀಡಿದ್ದಾರೆ.
ಯಾವುದೇ ಸರ್ಕಾರಿ ನೌಕರರಿಗೆ ಅಥವಾ ಸಾರ್ವಜನಿಕರಿಗೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಇಂತಹ ಸುಳ್ಳು ಕರೆಗಳು ಬಂದರೆ ಅಥವಾ ಹಣಕ್ಕಾಗಿ ಬೇಡಿಕೆಯಿಟ್ಟರೆ ಮೋಸ ಹೋಗಬಾರದು. ಇಂತಹ ಘಟನೆಗಳು ನಡೆದ ಕೂಡಲೇ ಸಮೀಪದ ಲೋಕಾಯುಕ್ತ ಪೊಲೀಸ್ ಠಾಣೆ ಅಥವಾ ಜಿಲ್ಲಾ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಕೋರಿದ್ದಾರೆ.
Fake Lokayukta Inspector Demands Money from Shimoga
