Farmers Protest ಶಿವಮೊಗ್ಗ: ಅಕಾಲಿಕ ಮಳೆಯಿಂದಾಗಿ ಅಡಿಕೆ ತೋಟಗಳನ್ನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ಹತ್ತಕ್ಕೂ ಹೆಚ್ಚು ರೈತರು, ಪರಿಹಾರ ವಿತರಣೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ತಲೆಕೆಡಿಸಿಕೊಂಡಿಲ್ಲ ಎಂದು ಆರೋಪಿಸಿ ಆಕ್ರೋಶ ಹೊರಹಾಕಿದರು.
ಶಿವಮೊಗ್ಗ: ಬಕ್ರೀದ್ ವೇಳೆ ಅಕ್ರಮ ಗೋ ಸಾಗಾಟ ತಡೆಗೆ ಬಜರಂಗದಳ ಆಗ್ರಹ; ಬೃಹತ್ ಪ್ರತಿಭಟನೆಯ ಎಚ್ಚರಿಕೆ
ಈ ಸಂದರ್ಭದಲ್ಲಿ ರೈತರು ಹಾಗೂ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ಕಳೆದ 20 ದಿನಗಳ ಹಿಂದೆ ಸುರಿದ ಅಕಾಲಿಕ ಮಳೆಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೈಮರ, ಅರಹತೊಳಲು, ಮಂಗೋಟೆ, ಸನ್ಯಾಸಿಕೋಡಮಗ್ಗಿ ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಎಕರೆ ಪ್ರದೇಶಗಳಲ್ಲಿ ಅಡಿಕೆ ತೋಟಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ. ಆದರೆ, ಈವರೆಗೂ ಸರ್ಕಾರವಾಗಲಿ ಅಥವಾ ಜಿಲ್ಲಾಡಳಿತವಾಗಲಿ ಯಾವುದೇ ಸೂಕ್ತ ಪರಿಹಾರ ನೀಡಿಲ್ಲ. ನಮ್ಮ ನೋವನ್ನು ಕೇಳುವವರು ಯಾರು ಎಂದು ರೈತರು ಪೊಲೀಸರನ್ನು ಪ್ರಶ್ನಿಸಿದರು. ಅಷ್ಟೇ ಅಲ್ಲದೆ, ಇದೇ ವೇಳೆ ಜಿಲ್ಲಾ ಪಂಚಾಯಿತಿ ಕಚೇರಿಯ ಮುಂಭಾಗದಲ್ಲಿಯೇ ಪ್ರತಿಭಟನಾಕಾರರು ಧರಣಿ ಕುಳಿತರು.
ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಶಿವಮೊಗ್ಗ ನಗರ ಶಾಸಕ ಎಸ್. ಎನ್. ಚನ್ನಬಸಪ್ಪ ಹಾಗೂ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರು ರೈತರ ಮನವಿಯನ್ನು ಸ್ವೀಕರಿಸಿದರು. ಅಲ್ಲದೆ, ಇಂದು ನಡೆಯಲಿರುವ ಕೆಡಿಪಿ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ರೈತರಿಗೆ ಭರವಸೆ ನೀಡಿದರು.
ಇದಾದ ನಂತರ ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಅವರು ಆಗಮಿಸಿದರು. ಈ ಸಂದರ್ಭದಲ್ಲಿ ಧರಣಿ ನಿರತ ರೈತರ ಸಮಸ್ಯೆಗಳನ್ನು ಆಲಿಸಿ, ಅವರಿಂದ ಮನವಿ ಪತ್ರವನ್ನು ಸ್ವೀಕರಿಸಿದ ಸಚಿವರು, ಬೆಳೆ ಹಾನಿಗೆ ಸೂಕ್ತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
