ಶಿವಮೊಗ್ಗ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದೆ ಮತ್ತು ಸಂಪನ್ಮೂಲ ಕ್ರೂಢೀಕರಣ ಮಾಡುವಲ್ಲಿ ವಿಫಲವಾಗಿದೆ ಎಂದು ಚಿತ್ರದುರ್ಗ ಸಂಸದ ಹಾಗೂ ಹಿರಿಯ ಬಿಜೆಪಿ ನಾಯಕ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾಗರೊಂದಿಗೆ ಮಾತನಾಡಿದ ಅವರು ಚುನಾವಣೆ ವೇಳೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ದೆಹಲಿಯಿಂದ ಕರೆತಂದು ದೊಡ್ಡ ಭಾಷಣ ಮಾಡಿಸಿ, ಗ್ಯಾರಂಟಿಗಳ ಆಮಿಷ ಒಡ್ಡಲಾಗಿತ್ತು. ಪ್ರತಿಯೊಬ್ಬ ಹೆಣ್ಣುಮಗಳಿಗೆ 2,000, ಯುವಕರಿಗೆ ಯುವನಿಧಿ, ಉಚಿತ ವಿದ್ಯುತ್ ಹಾಗೂ 10 ಕೆಜಿ ಅಕ್ಕಿ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿ, ಅಧಿಕಾರಕ್ಕೆ ಬಂದ ನಂತರ ದಿನಕ್ಕೊಂದು ನಿಯಮ ತಂದು ಜನರಿಗೆ ವಂಚಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಗೆ ಈಗ ಕುತ್ತು ಬಂದಿದ್ದು, ಬಡವರು ಮತ್ತು ದೀನ-ದಲಿತರನ್ನು ಈ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದು ಕಾರಜೋಳ ಕಿಡಿಕಾರಿದರು.
ದಲಿತರ ಕಲ್ಯಾಣ, ಶಿಕ್ಷಣ ಮತ್ತು ಉದ್ಯೋಗಕ್ಕೆ ಬಳಕೆಯಾಗಬೇಕಿದ್ದ ಎಸ್ಸಿ-ಎಸ್ಟಿ ನಿಧಿಯ) ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಅಕ್ರಮವಾಗಿ ತಿರುಗಿಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ದಲಿತ ಮಹಿಳೆಯರ ಮೇಲೆ ಹಲ್ಲೆಗಳಾಗುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ತೀವ್ರ ಸಂಕಷ್ಟದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ತೀವ್ರವಾಗಿ ಖಂಡಿಸಿದರು.
ಇದೇ ವೇಳೆ ವಿದ್ಯುತ್ ವಲಯದ ಖಾಸಗೀಕರಣದ ಬಗ್ಗೆ ಮಾತನಾಡಿದ ಅವರು ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಟಾಟಾ ನಂತಹ ಕಾರ್ಪೊರೇಟ್ ಕಂಪನಿಗಳಿಗೆ ಒಪ್ಪಿಸಲು ಅರ್ಜಿ ಕರೆದಿದೆ. ಇದು ಖಾಸಗೀಕರಣವಾದರೆ ಎಸ್ಸಿ-ಎಸ್ಟಿ ಸಮುದಾಯದ ಉದ್ಯೋಗ ಮೀಸಲಾತಿಗೆ ಕುತ್ತು ಬರಲಿದೆ. ಅಷ್ಟೇ ಅಲ್ಲದೇ, ಇದು ರೈತರಿಗೆ ಮರಣಶಾಸನವಾಗಲಿದ್ದು, ಅವರಿಗೆ ಸಿಗುತ್ತಿರುವ ಉಚಿತ ವಿದ್ಯುತ್ಗೆ ಕತ್ತರಿ ಬೀಳಲಿದೆ. ಬಿಡದಿಯಲ್ಲಿ ರೈತರ ಒಪ್ಪಿಗೆಯಿಲ್ಲದೆ ಬಲವಂತವಾಗಿ ಜಮೀನು ವಶಪಡಿಸಿಕೊಳ್ಳಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
