ಮಲೆನಾಡು ಟುಡೆ ಸುದ್ದಿ | ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನ ಭಾವೈಕ್ಯತೆಯ ಕೇಂದ್ರ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾದಲ್ಲಿ ಇಂದು ಕಾಣಿಕೆ ಹುಂಡಿ ಎಣಿಕೆ ಕಾರ್ಯ ಯಶಸ್ವಿಯಾಗಿ ನೆರವೇರಿತು. ಎಣಿಕೆಯಲ್ಲಿ ಭಕ್ತಾದಿಗಳಿಂದ ಒಟ್ಟು 1,01,73,650 ನಗದು ಸಂಗ್ರಹವಾಗಿದೆ. ಇದರ ಜೊತೆಗೆ ಭಕ್ತಾದಿಗಳು ಕಾಣಿಕೆಯಾಗಿ ಸಮರ್ಪಿಸಿದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳೂ ಕೂಡ ಸ್ವೀಕೃತಗೊಂಡಿವೆ. ಸಂಗ್ರಹವಾದ ಈ ಸಂಪೂರ್ಣ ನಗದು ಮೊತ್ತವನ್ನು ಸರ್ಕಾರದ ನಿಯಮಾನುಸಾರ ತಕ್ಷಣವೇ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.
ಈ ಹುಂಡಿ ಎಣಿಕೆ ಪ್ರಕ್ರಿಯೆಯನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್. ಹೇಮಂತ್ ಕುಮಾರ್ ಹಾಗೂ ಉಪವಿಭಾಗಾಧಿಕಾರಿಗಳಾದ ಡಾ. ಮೈತ್ರಿ ರವರು ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ರಂಜಿತ್, ಮುಜರಾಯಿ ತಹಸೀಲ್ದಾರ್ ಆರ್. ಪ್ರದೀಪ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆರೆಹಳ್ಳಿ ರಾಮಪ್ಪ ಹಾಗೂ ಸಮಿತಿಯ ಸರ್ವ ಸದಸ್ಯರು, ಕಾರ್ಯನಿರ್ವಾಹಕ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿಗಳು, ಬ್ಯಾಂಕ್ ಸಿಬ್ಬಂದಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
