ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ : ರಾಜ್ಯದ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಎರಡು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ.
ಪಡಿತರ ಚೀಟಿದಾರರ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ವಿಧಿಸಲಾಗಿದ್ದ ಗಡುವನ್ನು ಸರ್ಕಾರ ಮತ್ತೆ ಮುಂದೂಡಿದೆ. ತಾಂತ್ರಿಕ ಹಾಗೂ ಸರ್ವರ್ ಸಮಸ್ಯೆಗಳಿಂದಾಗಿ ಜನರು ಇ-ಕೆವೈಸಿ ಮಾಡಿಸಲು ಅನುಭವಿಸುತ್ತಿದ್ದ ತೊಂದರೆಯನ್ನು ಮನಗಂಡು, ಅಕ್ಟೋಬರ್ 20ರವರೆಗೆ ಕಾಲಾವಕಾಶ ವಿಸ್ತರಿಸಿ ಇಲಾಖೆ ಆದೇಶಿಸಿದೆ ಎಂದು ಆಹಾರ ಸಚಿವರು ಸ್ಪಷ್ಟಪಡಿಸಿದ್ದಾರೆ.
ಮತ್ತೊಂದೆಡೆ, ದಿನಗೂಲಿ ಕಾರ್ಮಿಕರು, ಆಟೋ ಚಾಲಕರು ಹಾಗೂ ಶ್ರಮಿಕ ವರ್ಗದವರ ಕೆಲಸದ ಅವಧಿಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಅಕ್ಟೋಬರ್ 1ರಿಂದ ಜಾರಿಗೆ ಬರಲಿರುವ ನೂತನ ನಿಯಮದಂತೆ, ಇನ್ಮುಂದೆ ಬೆಳಗ್ಗೆ 7:00 ರಿಂದ ಮಧ್ಯಾಹ್ನ 12:00 ರವರೆಗೆ ಹಾಗೂ ಸಂಜೆ 4:00 ರಿಂದ ರಾತ್ರಿ 8:00 ಗಂಟೆಯವರೆಗೆ ಪಡಿತರ ವಿತರಣೆ ನಡೆಯಲಿದೆ.
