ಶಿವಮೊಗ್ಗ: ಆಹಾರ ಸಚಿವ ಹಾಗೂ ಮಾದಿಗ ಸಮುದಾಯದ ಹಿರಿಯ ನಾಯಕರಾದ ಕೆ ಹೆಚ್ ಮುನಿಯಪ್ಪ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಡಿ. ಎಸ್. ಗುರುಮೂರ್ತಿ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 50 ಲಕ್ಷಕ್ಕೂ ಹೆಚ್ಚು ಮಾದಿಗ ಸಮುದಾಯದ ಜನಸಂಖ್ಯೆ ಇದೆ. ಅವರ ಬೆಂಬಲದಿಂದಲೇ 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚಿತ್ರದುರ್ಗದಲ್ಲಿ ಎಸ್ಸಿ/ಎಸ್ಟಿ ಸಮಾವೇಶ ನಡೆದಾಗ, ಸಿಎಂ ಸಿದ್ದರಾಮಯ್ಯ ಅವರು ಒಳಮೀಸಲಾತಿ ಜಾರಿಗೆ ತರುತ್ತೇವೆ ಎಂದಿದ್ದರಿಂದ ಮಾದಿಗ ಸಮುದಾಯದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಆರಂಭಿಸಿದರು. ಅಷ್ಟೇ ಅಲ್ಲದೆ, ಸತತ 5 ದಶಕಗಳ ಕಾಲ ಕೆ ಹೆಚ್ ಮುನಿಯಪ್ಪ ಅವರು ರಾಜಕಾರಣದಲ್ಲಿದ್ದು, ಅವರನ್ನು ಮಂತ್ರಿ ಮಾಡಿದ ನಂತರ ಮಾದಿಗ ಸಮುದಾಯದವರು ಕಾಂಗ್ರೆಸ್ಗೆ ಮತ ಹಾಕಿದ್ದಾರೆ. ಅಂತಹ ಧೀಮಂತ ನಾಯಕ ನಮ್ಮ ಎಚ್. ಕೆ. ಮುನಿಯಪ್ಪ ಆಗಿದ್ದಾರೆ ಎಂದರು.
ಸ್ವಾತಂತ್ರ್ಯ ಬಂದ ನಂತರದಿಂದ ಮಾದಿಗ ಸಮಾಜದ ಯಾವೊಬ್ಬ ವ್ಯಕ್ತಿಗೂ ಕಾಂಗ್ರೆಸ್ ಪಕ್ಷದಿಂದ ಉಪಮುಖ್ಯಮಂತ್ರಿಯಾಗಲಿ ಅಥವಾ ಮುಖ್ಯಮಂತ್ರಿ ಸ್ಥಾನವಾಗಲಿ ಸಿಕ್ಕಿಲ್ಲ. ಬಿಜೆಪಿಯಲ್ಲಿ ಗೋವಿಂದ ಕಾರಜೋಳ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದರು, ಆದರೆ ಕಾಂಗ್ರೆಸ್ನಲ್ಲಿ ನೀಡಿಲ್ಲ. ಆದ್ದರಿಂದ ಈ ಬಾರಿ ಕೆ ಹೆಚ್ ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು. ಅಷ್ಟೇ ಅಲ್ಲದೆ, ಮಾದಿಗ ಸಮುದಾಯದ ಇನ್ನೂ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯಸಮ್ಮತ ರಾಜಕೀಯ ಪ್ರತಿನಿಧಿತ್ವ ನೀಡಬೇಕು. ಇದರ ಮೂಲಕ ಕಾಂಗ್ರೆಸ್ ಸರ್ಕಾರ ತನ್ನ ಪ್ರಬಲತೆಯನ್ನು ಕಾಯ್ದುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
