ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ಬ್ಯಾನರ್ ವಿಚಾರವಾಗಿ ನಡೆಯುತ್ತಿರುವ ಸಂಘರ್ಷಗಳು ತಾರಕಕ್ಕೇರಿವೆ. ಬಳ್ಳಾರಿಯ ಬ್ಯಾನರ್ ಗಲಾಟೆಯ ಬೆನ್ನಲ್ಲೇ, ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರಿಗೆ ಬ್ಯಾನರ್ ಒಂದನ್ನು ತೆರವುಗೊಳಿಸಿದ್ದಕ್ಕೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಈಗ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಶಿವಮೊಗ್ಗದಲ್ಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಅವರು ರಾಜ್ಯ ಸರ್ಕಾರದ ವಿರುದ್ಧ ವೀರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ.

ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ
ಇಂದು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಂಜುಳಾ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳಾ ಅಧಿಕಾರಿಗಳಿಗೆ ಕಿಂಚಿತ್ತೂ ರಕ್ಷಣೆ ಇಲ್ಲದಂತಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಒಬ್ಬ ಕರ್ತವ್ಯನಿಷ್ಠ ಮಹಿಳಾ ಅಧಿಕಾರಿಗೆ ಸಾರ್ವಜನಿಕವಾಗಿ ನಿಂದಿಸಿರುವುದು ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇತ್ತೀಚೆಗೆ ನಡೆಯುತ್ತಿರುವ ಸರಣಿ ಘಟನೆಗಳನ್ನು ಗಮನಿಸಿದರೆ, ಕಾಂಗ್ರೆಸ್ ಸರ್ಕಾರವು ತನ್ನ ಪುಡಾರಿಗಳ ಕೈಗೆ ಕಾನೂನು ಸುವ್ಯವಸ್ಥೆಯನ್ನು ಅಡ ಇಟ್ಟಂತೆ ಭಾಸವಾಗುತ್ತಿದೆ ಎಂದು ಅವರು ಕಟುವಾಗಿ ಟೀಕಿಸಿದರು.
ಗೃಹ ಸಚಿವ ಪರಮೇಶ್ವರ್ ಮತ್ತು ಸ್ಥಳೀಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ ಅವರು, ಎಫ್.ಐ.ಆರ್ ದಾಖಲಾದ ತಕ್ಷಣವೇ ಆರೋಪಿ ರಾಜೀವ್ ಗೌಡನನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಮಹಿಳಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸಿದ ಮಂಜುಳಾ ಅವರು, ಸಣ್ಣಪುಟ್ಟ ವಿಷಯಗಳಿಗೂ ತಕ್ಷಣ ಪ್ರತಿಕ್ರಿಯಿಸುವ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ಒಬ್ಬ ಮಹಿಳಾ ಅಧಿಕಾರಿಗೆ ಆಗಿರುವ ಅವಮಾನ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದರು. ಮಹಿಳಾ ಆಯೋಗವು ಕಾಂಗ್ರೆಸ್ ಏಜೆಂಟ್ನಂತೆ ವರ್ತಿಸಬಾರದು ಮತ್ತು ಕೂಡಲೇ ಆರೋಪಿಯ ಬಂಧನಕ್ಕೆ ದನಿ ಎತ್ತಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಈ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸಿದರೆ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
Manjula Slams Congress Govt Over Abuse of Woman
