NSUI Shimoga ಶಿವಮೊಗ್ಗ: ಕೇಂದ್ರದ ಬಿಜೆಪಿ ಸರ್ಕಾರವು ದೇಶದ ಯುವಜನತೆಗೆ ಉದ್ಯೋಗ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ,ಶಿವಮೊಗ್ಗ ಜಿಲ್ಲಾ ಎನ್ಎಸ್ಯುಐ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಿರುದ್ಯೋಗಿ ಯುವಕರ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಕೇಂದ್ರ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕೆಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಶಿವಮೊಗ್ಗ: ತುಂಗಾನಗರದಲ್ಲಿ ಯುವಕನ ಶವ ಪತ್ತೆ; ಗೆಳೆಯನ ವಿರುದ್ಧ ಕೊಲೆ ಆರೋಪ ?
NSUI Shimoga ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಳೆದ ಹಲವು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯದೆ ಸುಮಾರು 10 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಬಿದ್ದಿವೆ. ಈ ಹುದ್ದೆಗಳನ್ನು ಭರ್ತಿ ಮಾಡದೆ ಯುವಜನತೆಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಎನ್ಎಸ್ಯುಐ ತೀವ್ರವಾಗಿ ಖಂಡಿಸಿತು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು, ಇಂದು ಮೂರನೇ ಅವಧಿಯಲ್ಲೂ ಉದ್ಯೋಗ ನೀಡುವ ಬದಲಿಗೆ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ದೇಶದ ಸಾರ್ವಜನಿಕ ವಲಯದ ಕೈಗಾರಿಕೆಗಳನ್ನು ಮುಚ್ಚುವ ಮೂಲಕ ಲಕ್ಷಾಂತರ ಕುಟುಂಬಗಳನ್ನು ಬೀದಿಗೆ ತಳ್ಳಲಾಗುತ್ತಿದೆ. ವಿವಿಧ ನಿಗಮಗಳಲ್ಲಿ ಹೊರಗುತ್ತಿಗೆ ಪದ್ಧತಿಯನ್ನು ಜಾರಿಗೆ ತರುವ ಮೂಲಕ ನೌಕರರ ಜೀವನ ಭದ್ರತೆಯನ್ನು ಕಸಿದುಕೊಳ್ಳಲಾಗುತ್ತಿದೆ. ಭಾರತ ಅಭಿವೃದ್ಧಿ ಹೊಂದುತ್ತಿದೆ” ಎಂಬ ಘೋಷಣೆಗಳ ನಡುವೆ, ವಾಸ್ತವದಲ್ಲಿ ಯುವಜನರ ಬದುಕು ದುಸ್ತರವಾಗುತ್ತಿದೆ ಎಂದು ಸಂಘಟನೆಯ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.
ಖಾಲಿ ಇರುವ ಹುದ್ದೆಗಳಿಂದಾಗಿ ಸಾರ್ವಜನಿಕ ಸೇವೆಗಳೂ ವಿಳಂಬವಾಗುತ್ತಿವೆ. ಸರ್ಕಾರಿ ಇಲಾಖೆಗಳಲ್ಲಿ ಖಾಯಂ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಮತ್ತು ಹೊರಗುತ್ತಿಗೆ ಪದ್ಧತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ರಾಷ್ಟ್ರಪತಿಗಳು ಈ ಕೂಡಲೇ ಮಧ್ಯಪ್ರವೇಶಿಸಿ ಯುವಜನ ವಿರೋಧಿ ಧೋರಣೆ ತಳೆದಿರುವ ಕೇಂದ್ರ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಎನ್ಎಸ್ಯುಐ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಟಿಕೆರೆ, ನಗರಾಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷರಾದ ಆದಿತ್ಯ ಮತ್ತು ಸುಬಾನ್, ಪ್ರಧಾನ ಕಾರ್ಯದರ್ಶಿಗಳಾದ ಚಂದ್ರೋಜಿ ರಾವ್ ಮತ್ತು ವರುಣ್ ಸೇರಿದಂತೆ ಅಭಿ, ತಾಫಿಕ್, ಫರಾಜ್, ಶ್ರೀಕಾಂತ್, ಯೂಸುಫ್, ಪ್ರಭು, ರಿಹಾನ್, ಸಾದ್ ಉಲ್ಲಾ, ಪವನ್, ಪ್ರಜ್ವಲ್, ಲೋಹಿತ್, ಸುಲ್ತಾನ್, ಅಡೀಬ್, ಕಿಶನ್, ಚಂದನ್, ಉಮೇಶ್, ಅಂತೋನಿ ಮತ್ತು ನಾಗರಾಜ್ ಮತ್ತಿತರ ಪದಾಧಿಕಾರಿಗಳು ಭಾಗವಹಿಸಿದ್ದರು.
NSUI Shimoga Protests Against Central Govt


