ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ನಗರದ ಹೊರವಲಯದ ಸವಳಂಗ ರಸ್ತೆಯಲ್ಲಿರುವ ಕೃಷಿ ಕಾಲೇಜು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಕೋಟೆ ಗಂಗೂರು ನಿವಾಸಿ ಆನಂದ್ (48) ಮೃತಪಟ್ಟ ದುರ್ದೈವಿ . ಇವರು ಸ್ಥಳೀಯ ತುಂಗತರಂಗ ದಿನಪತ್ರಿಕೆಯ ಸಿಬ್ಬಂದಿಗಳಾದ ರಾಕೇಶ್ ಹಾಗೂ ರವಿ ಅವರ ತಂದೆಯಾಗಿದ್ದಾರೆ. ಆನಂದ್ ಅವರು ಚನ್ನಮುಂಬಾಪುರದಲ್ಲಿದ್ದ ತಮ್ಮ ಪತ್ನಿಯ ಮನೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ
ಸವಳಂಗ ರಸ್ತೆಯನ್ನು ದಾಟಲು ಯತ್ನಿಸುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಆನಂದ್ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣವೇ ಬಸ್ ಚಾಲಕ ವಾಹನವನ್ನು ಸವಳಂಗದವರೆಗೆ ಚಲಾಯಿಸಿಕೊಂಡು ಹೋಗಿ, ಬಳಿಕ ಸ್ಥಳೀಯ ಪೊಲೀಸರಿಗೆ ಅಪಘಾತದ ಕುರಿತು ಮಾಹಿತಿ ನೀಡಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿವಮೊಗ್ಗ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
