ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ.: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಕೆಎಸ್ಆರ್ ಪಿ, ಕೆಎಸ್ ಐ ಎಸ್ ಎಫ್, ಭಾರತೀಯ ಮೀಸಲು ಪಡೆ) ಉಳಿಕೆ ಮೂಲ ವೃಂದ ಹಾಗೂ ಸ್ಥಳೀಯ ವೃಂದದ ಹುದ್ದೆಗಳ ನೇರ ನೇಮಕಾತಿ ಸಂಬಂಧ ಸೆಪ್ಟೆಂಬರ್ 20 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಯಶಸ್ವಿಯಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ಜಿಲ್ಲಾಡಳಿತ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆಪ್ಟೆಂಬರ್ 20 ರ ಭಾನುವಾರದಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ಹಾಗೂ ಮಧ್ಯಾಹ್ನ 3:00 ರಿಂದ 04:30 ರವರೆಗೆ ಶಿವಮೊಗ್ಗ ನಗರದ 29 ಕೇಂದ್ರಗಳು ಮತ್ತು ಭದ್ರಾವತಿ ತಾಲೂಕಿನ 5 ಕೇಂದ್ರಗಳು ಸೇರಿ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು ಆರ್ ಪಿ ಸಿ 11712 ಹಾಗೂ ಕೆ ಕೆ 4118 ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಎದುರಿಸಲಿದ್ದಾರೆ.
ಪರೀಕ್ಷಾ ಕೇಂದ್ರಗಳ ಒಳಗೆ ವಾಚ್, ಸ್ಮಾರ್ಟ್ ವಸ್ತುಗಳು, ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಊಟ-ಉಪಹಾರ ತರುವುದಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಸರ್ಕಾರ ಹಾಗೂ ಇಲಾಖೆ ಸೂಚಿಸಿರುವ ವಸ್ತ್ರಸಂಹಿತೆ ನಿಯಮಾವಳಿಗಳಂತೆ ಅಭ್ಯರ್ಥಿಗಳನ್ನು ಪರಿಶೀಲಿಸಿದ ನಂತರವೇ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅನುಮತಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಪರೀಕ್ಷೆಯ ಹಿನ್ನೆಲೆಯಲ್ಲಿ ಬಿ.ಎನ್.ಎಸ್ ಸೆಕ್ಷನ್ 163 ಜಾರಿಗೊಳಿಸಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಿಳಿಸಿದರು.
ಪ್ರಶ್ನೆ ಪತ್ರಿಕೆಗಳ ಸಾಗಾಟಕ್ಕಾಗಿ ತ್ರಿ-ಸದಸ್ಯ ಸಮಿತಿ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ. ಒಟ್ಟು 11 ಪ್ರಶ್ನೆ ಪತ್ರಿಕೆ ವಿತರಕ ಮಾರ್ಗಗಳನ್ನು (ಶಿವಮೊಗ್ಗ-09, ಭದ್ರಾವತಿ-02) ರಚಿಸಲಾಗಿದೆ. ಅಭ್ಯರ್ಥಿಗಳ ಹಾಲ್ ಟಿಕೆಟ್ ಸ್ಕ್ಯಾನ್ ಮಾಡಿ, ಫೇಸ್ ರೆಕಗ್ನಿಷನ್ ಮೂಲಕ ಪರಿಶೀಲಿಸಿದ ನಂತರವೇ ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ನೀಡಲಾಗುತ್ತದೆ.
ಪರೀಕ್ಷೆಯ ಪಾರದರ್ಶಕತೆಗಾಗಿ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ, ಡ್ರೆಸ್ ಕೋಡ್ ಆಫೀಸರ್ ನಿಯೋಜನೆ ಹಾಗೂ ಪ್ರತಿ 05 ಕೇಂದ್ರಗಳಿಗೆ ಒಂದರಂತೆ ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ಜಿಲ್ಲಾಡಳಿತದಿಂದ ನೇಮಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ಯಾವುದೇ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಇಲಾಖೆಗೆ ಪತ್ರ ಬರೆಯಲಾಗಿದ್ದು, ಮೆಸ್ಕಾಂ ಈ ಬಗ್ಗೆ ಕ್ರಮ ವಹಿಸಬೇಕು ಎಂದರು.
ಪರೀಕ್ಷೆ ಮುಗಿದ ನಂತರ ಓ.ಎಮ್.ಆರ್ ಬಂಡಲ್ಗಳನ್ನು ಜಿಲ್ಲಾ ಖಜಾನೆಯಲ್ಲಿ ಠೇವಣಿಕರಿಸಿ, ಕಂಟೇನರ್ ಮೂಲಕ ಬಿಗಿಯಾದ ಎಸ್ಕಾರ್ಟ್ ಭದ್ರತೆಯಲ್ಲಿ ಬೆಂಗಳೂರಿಗೆ ಕಳುಹಿಸಲು ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ ಅವರು, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಪರೀಕ್ಷೆಗೆ ಸಂಬಂಧಿತ ಎಲ್ಲ ಮಾರ್ಗಸೂಚಿಗಳನ್ನು ತಿಳಿದುಕೊಂಡು ಯಶಸ್ವಿಯಾಗಿ ಮತ್ತು ಸುಗಮವಾಗಿ ಪರೀಕ್ಷೆಗಳನ್ನು ನಡೆಸಿಕೊಡಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ ಅವರು ಭದ್ರತೆ ಹಾಗೂ ತಪಾಸಣೆ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷೆಗೆ ನಿಯೋಜಿಸಲಾದ ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
