ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಅಣ್ಣಾ ನಗರದ ಆನಂದರಾವ್ ಬಡಾವಣೆಯಲ್ಲಿ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನು ಹತ್ಯೆ ಮಾಡಿರುವ ಘಟನೆ ಸಬಂಧ ಆರೋಪಿ ಮೇಲೆ ಪೊಲೀಸರು ಫೈರ್ ಮಾಡಿದ್ದು ಕಾಲಿಗೆ ಗುಂಡು ಹಾರಿಸಿದ್ದಾರೆ.
ನಿನ್ನೆ ನಡೆದಿದ್ದ ಘಟನೆಯಲ್ಲಿ ಸುಶೀಲಮ್ಮ (65) ಎಂಬವರು ಸಾವನ್ನಪ್ಪಿದ್ದರು , ಆರೋಪಿ ಮೊಮ್ಮಗ ಕಿಶೋರ್ (26) ಈ ಕೃತ್ಯ ಎಸಗಿದ್ದ. ಈ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ 103(1) ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನತ್ತಿದ ದೊಡ್ಡಪೇಟೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ, ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.
ಇವತ್ತು ಬೆಳಗ್ಗೆ ಆರೋಪಿಯು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾಜಪೇಯಿ ಬಡಾವಣೆಯಲ್ಲಿ ಇರುವ ಬಗ್ಗೆ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಆತನನ್ನು ಹಿಡಿಯಲು ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ಮಾಡಿದ್ದಾನೆ. ಕಿಶೋರ್ ತನ್ನ ಬಳಿಯಿದ್ದ ಚಾಕುವಿನಿಂದ ಪೊಲೀಸ್ ಸಿಬ್ಬಂದಿ ಗಣೇಶ್ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಇನ್ಸ್ಪೆಕ್ಟರ್ ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಗಾಯಗೊಂಡ ಸಿಬ್ಬಂದಿ ಗಣೇಶ್ ಹಾಗೂ ಆರೋಪಿ ಕಿಶೋರನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಚಿಕಿತ್ಸೆ ನಡೆಯುತ್ತಿದೆ. ಇನ್ನೂ ಇದೇ ವಿಚಾರವಾಗಿ ಎಸ್ಪಿ ನಿಖಿಲ್ ಬಿ ಆಸ್ಪತ್ರೆಗೆ ಭೇಟಿಕೊಟ್ಟು ಸಿಬ್ಬಂದಿಯ ಆರೋಗ್ಯ ವಿಚಾರಿಸಿ, ಮಾಧ್ಯಮಗಳಿಗೆ ನಡೆದ ಘಟನೆಯ ಮಾಹಿತಿ ಒದಗಿಸಿದ್ದಾರೆ.


