ಶಿವಮೊಗ್ಗ | ಶಿವಮೊಗ್ಗದ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ಆಟೋ ಪ್ರಿಪೇಯ್ಡ್ ಕೌಂಟರ್’ಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು.
ಈ ಉದ್ಘಾಟನಾ ಕಾರ್ಯಕ್ರಮದ ನಂತರ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಮತ್ತು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಅವರು ಒಂದೇ ಆಟೋದಲ್ಲಿ ಕುಳಿತು ಪ್ರಯಾಣಿಸಿದರು. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ಹಾಗೂ ಚೈತನ್ಯ ರೂರಲ್ ಡೆವಲಪ್ಮೆಂಟ್ ಸೊಸೈಟಿಯ ಜಂಟಿ ಸಹಯೋಗದಲ್ಲಿ ಈ ಮಹತ್ವದ ಯೋಜನೆ ಜಾರಿಗೆ ಬಂದಿದೆ.
ಶಿವಮೊಗ್ಗದ ಬಸ್ ನಿಲ್ದಾಣಗಳಲ್ಲಿ ಆಟೋ ಚಾಲಕರು ಮತ್ತು ಪ್ರಯಾಣಿಕರ ನಡುವೆ ದರದ ವಿಚಾರವಾಗಿ ಆಗಾಗ್ಗೆ ವಾಗ್ವಾದಗಳು ನಡೆಯುತ್ತಿದ್ದವು. ಪ್ರಿಪೇಯ್ಡ್ ಕೌಂಟರ್ ತೆರೆಯುವ ಬಗ್ಗೆ ಹಲವು ವರ್ಷಗಳಿಂದ ಪರ-ವಿರೋಧದ ಚರ್ಚೆಗಳು ನಡೆಯುತ್ತಿದ್ದವು. ಈಗ ಅಧಿಕೃತವಾಗಿ ಕೌಂಟರ್ ಆರಂಭವಾಗಿರುವುದರಿಂದ ಪ್ರಯಾಣಿಕರು ನಿಗದಿತ ದರ ಪಾವತಿಸಿ ಸುರಕ್ಷಿತವಾಗಿ ಪ್ರಯಾಣಿಸಬಹುದಾಗಿದೆ.

Prepaid Auto Counter Launched in Shivamogga

