Protest in Shivamogga ಶಿವಮೊಗ್ಗ : ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಡಿಸಿಎಂ ಪಟ್ಟ ನೀಡಬೇಕೆಂಬ ಆಗ್ರಹಿಸಿ ಶಿವಮೊಗ್ಗದಲ್ಲಿ ಮುಸ್ಲಿಂ ಹಕ್ಕುಗಳ ವೇದಿಕೆ ನೇತೃತ್ವದಲ್ಲಿ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ನಗರದ ಅಮೀರ್ ಅಹಮದ್ ಸರ್ಕಲ್ನಲ್ಲಿ ಪ್ರತಿಭಟನಾಕಾರರು, ಜಮೀರ್ ಅಹಮದ್ ಪರವಾಗಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಜಮೀರ್ ಅಹಮದ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತರಾಗದೆ, ಕ್ರಿಯಾಶೀಲ ಹಾಗೂ ಜಾತ್ಯತೀತ ಮೌಲ್ಯಗಳನ್ನು ಹೊಂದಿರುವ ಪ್ರಭಾವಿ ಜನನಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಅವರು ಶ್ರಮಿಸಿದ್ದಾರೆ. ಶಾಸಕರಾಗಿ ಹಾಗೂ ಸಚಿವರಾಗಿ ಅವರು ಜನಮನ ಗೆದ್ದಿದ್ದಾರೆ, ಎಂದು ಅವರ ರಾಜಕೀಯ ಹಿರಿತನವನ್ನು ಶ್ಲಾಘಿಸಿದರು.
ದಶಕಗಳಿಂದ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತಿದೆ. ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಜಮೀರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಸಿಗಲಿದೆ ಎಂಬ ಬಲವಾದ ಆಸೆ ಇತ್ತು. ಆದರೆ ಹೈಕಮಾಂಡ್ ಈ ನಿರೀಕ್ಷೆಯನ್ನು ಹುಸಿಗೊಳಿಸಿರುವುದು ಸಮುದಾಯದಲ್ಲಿ ಅಸಮಾಧಾನ ಮೂಡಿಸಿದೆ. ರಾಜ್ಯ ಸರ್ಕಾರ ಮತ್ತು ಹೈಕಮಾಂಡ್ ತಕ್ಷಣವೇ ಎಚ್ಚೆತ್ತುಕೊಂಡು ಜಮೀರ್ ಅಹಮದ್ ಖಾನ್ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಹಾಗೂ ಸಚಿವ ಸಂಪುಟದಲ್ಲಿ ಸಮುದಾಯದ ಅರ್ಹ ಶಾಸಕರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು, ಎಂದು ವೇದಿಕೆ ಕಟು ಎಚ್ಚರಿಕೆ ನೀಡಿದೆ.
