ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಪ್ರಕಾರ, ಇವತ್ತು ಅಂದರೆ ಏಪ್ರಿಲ್ 20ರಂದು ರಾಜ್ಯದ ಒಟ್ಟು 14 ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ, ಬೆಳಗಾವಿ ಹಾಗೂ ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆಯು ಅಧಿಕೃತ ವರದಿಯಲ್ಲಿ ತಿಳಿಸಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ಅಬ್ಬರ ಮಳೆ ಸುರಿದಿದೆಯಾದರೂ ಸೆಖೆ ಮಾತ್ರ ಕಡಿಮೆಯಾಗಿಲ್ಲ.
14 ಜಿಲ್ಲೆಗಳಲ್ಲಿ ಇಂದು ಮಳೆ
ದಕ್ಷಿಣ ಒಳನಾಡಿನ ವ್ಯಾಪ್ತಿಗೆ ಬರುವ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅದೇ ರೀತಿ, ಉತ್ತರ ಒಳನಾಡಿನ ವಿಭಾಗದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಳೆಯಾಗುವ ನಿರೀಕ್ಷೆ ಇದೆ ಎಂದಿದೆ.
ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಹಗುರವಾದ ಮಳೆಯಾಗಬಹುದು ಎಂದು ವರದಿಯು ವಿವರಿಸಿದೆ.
ಮಳೆ ಆಗಮನದ ನಿರೀಕ್ಷೆಯ ಜೊತೆಯಲ್ಲಿಯೇ ಏರುತ್ತಿದೆ ತಾಪಮಾನ
ರಾಜ್ಯದ ವಿವಿಧ ಭಾಗಗಳಲ್ಲಿ ತಾಪಮಾನದ ಪ್ರಮಾಣ ಏರಿಕೆಯಾಗಿಯಾಗಿದೆ. ಭಾನುವಾರದಂದು ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಎಂದರೆ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಉಳಿದಂತೆ ರಾಯಚೂರು ಜಿಲ್ಲೆಯಲ್ಲಿ 41.4 ಡಿಗ್ರಿ ಸೆಲ್ಸಿಯಸ್, ಬೀದರ್ ಜಿಲ್ಲೆಯಲ್ಲಿ 41.2 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 39.9 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ತಲಾ 39.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ವರದಿಯಾಗಿದ್ದರೆ, ರಾಜಧಾನಿ ಬೆಂಗಳೂರು ನಗರದಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿರುತ್ತದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.