ಸಾಗರ : ತಾಲೂಕಿನ ಹಿರೇನಲ್ಲೂರು ಗ್ರಾಮದ ವ್ಯಾಪ್ತಿಯಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆಯುತ್ತಿದ್ದ ಜಂಬಿಟ್ಟಿಗೆ (ಕಲ್ಲು) ಕ್ವಾರಿ ಹಾಗೂ ಮರಳು ಸಾಗಾಟದ ಆಡ್ಡೆಯ ಮೇಲೆ ತಹಶೀಲ್ದಾರ್ ಪ್ರತಿಭಾ ಆರ್. ಅವರು ಗುರುವಾರ ದಿಢೀರ್ ದಾಳಿ ನಡೆಸಿದ್ದಾರೆ.
ಗ್ರಾಮದ ಸರ್ವೆ ನಂಬರ್ 211ರಲ್ಲಿ ಈ ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಹಾಗೂ ಮರಳು ಸಾಗಣೆ ನಿರಂತರವಾಗಿ ನಡೆಯುತ್ತಿದ್ದ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.ದಾಳಿಯ ಸಂದರ್ಭದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಅಧಿಕಾರಿಗಳ ತಂಡವು ವಶಕ್ಕೆ ಪಡೆದುಕೊಂಡಿದೆ.
ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸರ್ಕಾರಿ ಜಾಗಗಳಲ್ಲಿ ಆಕ್ರಮವಾಗಿ ಕಲ್ಲು ಗಣಿಗಾರಿಕೆ, ಜಂಬಿಟ್ಟಿಗೆ ಕ್ವಾರಿ ಹಾಗೂ ಮರಳು ಸಾಗಾಣಿಕೆ ಚಟುವಟಿಕೆಗಳನ್ನು ನಡೆಸುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ಅವರು ಈ ವೇಳೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಾರ್ಯಾಚರಣೆಯ ತಂಡದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ, ಕಂದಾಯ ನಿರೀಕ್ಷಕ ವಿನಾಯಕ್, ಅರಣ್ಯ ಇಲಾಖೆಯ ಸಿಬ್ಬಂದಿ ಮಂಜುನಾಥ್ ಹಾಗೂ ಗ್ರಾಮ ಸಹಾಯಕ ಲೋಕೇಶ್ ಅವರು ಪಾಲ್ಗೊಂಡಿದ್ದರು.
