ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ರಾಷ್ಟ್ರಭಕ್ತರ ಬಳಗ ಹಾಗೂ ಪರಿಸರಕ್ಕಾಗಿ ನಾವು ಸಂಘಟನೆಗಳ ವತಿಯಿಂದ ಜೂನ್ 28 ರಂದು ಸಾಗರದ ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಇ. ಕಾಂತೇಶ್ ತಿಳಿಸಿದರು.
ಶಿವಮೊಗ್ಗ-ತಾಳಗುಪ್ಪ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ: ಎಲ್ಲಿಯವರೆಗೆ ಗೊತ್ತಾ ?
ನಗರದ ಪತ್ರಿಕಾ ಭವನದಲ್ಲಿ ಇಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ದಿನಗಳಿಂದ ನಾವು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದೇವೆ. ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್ನಲ್ಲಿ ಈ ಯೋಜನೆಗಾಗಿ ಬರೋಬ್ಬರಿ 15 ಸಾವಿರ ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದೆ. ಯಾರೋ ಕೆಲವರ ವೈಯಕ್ತಿಕ ಲಾಭಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ವೆಚ್ಚ ಮಾಡುವ ಮೂಲಕ ಸಾರ್ವಜನಿಕರ ಮೇಲೆ ಅನಗತ್ಯ ಹೊರೆ ಹೇರಲಾಗುತ್ತಿದೆ. ಆದ್ದರಿಂದ, ಈ ಜನವಿರೋಧಿ ಯೋಜನೆಯನ್ನು ಖಂಡಿಸಿ ಈ ಬಾರಿ ಅತ್ಯಂತ ಬೃಹತ್ ಪ್ರಮಾಣದ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತಿದ್ದೇವೆ, ಎಂದರು.
ಜೂನ್ 28ರ ಬೆಳಿಗ್ಗೆ ಶಿವಮೊಗ್ಗ ನಗರದ ಶುಭಮಂಗಳ ಕಲ್ಯಾಣ ಮಂಟಪದ ಆವರಣದಿಂದ ಸುಮಾರು 60 ಬಸ್ಗಳ ಮೂಲಕ ಸಾವಿರಾರು ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ಈ ಹೋರಾಟದಲ್ಲಿ ಭಾಗವಹಿಸಲು ಸಾಗರಕ್ಕೆ ತೆರಳಲಿದ್ದಾರೆ. ಮೊದಲು ಸಾಗರದ ಗಾಂಧಿ ವೃತ್ತದಲ್ಲಿ ಸಾಂಕೇತಿಕವಾಗಿ ಬೃಹತ್ ಪ್ರತಿಭಟನೆ ನಡೆಸಿ, ಬಳಿಕ ಅಲ್ಲಿಂದ ಕಾರ್ಗಲ್ನಲ್ಲಿರುವ KPC ಕಚೇರಿಗೆ ತೆರಳಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಮುಂದುವರಿಸಬಾರದು ಎಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಗುವುದು. ಈ ಹೋರಾಟದಲ್ಲಿ ಶ್ರೀ ಮಾರುತಿ ಗುರೂಜಿ ಅವರು ಸಹ ಭಾಗವಹಿಸಲಿದ್ದಾರೆ, ಎಂದು ಕಾಂತೇಶ್ ಮಾಹಿತಿ ನೀಡಿದರು.
