Shikaripura Bandh / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಾಳೆ ಅಂದರೆ ಆಗಸ್ಟ್ 19 ರಂದು ಶಿಕಾರಿಪುರ ಬಂದ್ ನಡೆಯಲಿದೆ. ಈ ನಿಟ್ಟಿನಲ್ಲಿ ಭಜರಂಗ ದಳ ಬಂದ್ಗೆ ಕರೆ ಕೊಟ್ಟಿದೆ. ಇದಕ್ಕೆ ಕಾರಣ ಭಜರಂಗದಳದ ಕಾರ್ಯಕರ್ತರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣ,
ಶಿಕಾರಿಪುರದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾದ ಬಜರಂಗದಳ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಘಟನೆಯನ್ನು ಖಂಡಿಸಿ ಆ.19ರಂದು ಸ್ವಯಂಪ್ರೇರಿತ ಶಿಕಾರಿಪುರ ಬಂದ್ಗೆ ಕರೆ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ರಾಜೇಶ್ ಗೌಡ ತಿಳಿಸಿದ್ದಾರೆ.
ನಿನ್ನೆ ದಿನ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋವುಗಳ ರಕ್ಷಣೆಗೆ ಮುಂದಾದ ಬಜರಂಗದಳ ಕಾರ್ಯಕರ್ತರ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆಸಿಕೊಂಡು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದರು. ಘಟನೆಯ ಸಂದರ್ಭದಲ್ಲಿ ಕಾರು ಕೂಡ ಜಖಂಗೊಂಡಿದೆ. ಈ ಪ್ರಕರಣದಲ್ಲಿ ಸರಕಾರ ಹಾಗೂ ಪೊಲೀಸರ ನಿಲುವು ಖಂಡನೀಯವಾಗಿದೆ ಎಂದು ಅವರು ಹೇಳಿದರು.
ಅಕ್ರಮ ಗೋ ಸಾಗಣೆಯನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಗೋ ಕಳ್ಳರನ್ನು ಹಾಗೂ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಬೇಕು ಎಂಬ ಬೇಡಿಕೆಯನ್ನು ಬಂದ್ ಮೂಲಕ ಮುಂದಿಡಲಾಗುವುದು ಎಂದು ರಾಜೇಶ್ ಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಮೇಶ್ ಬಾಬು, ಪ್ರತಿಮಾ, ಸಂತೋಷ್, ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು.
