ಶಿವಮೊಗ್ಗ: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿರುವ ಪೊಲೀಸರು, ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳನ್ನು ಸಿನಿಮಾ ಮಾದರಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಶಿವಮೊಗ್ಗ ಡಿವೈಎಸ್ಪಿ ಬಾಬು ಆಂಜನಪ್ಪ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.
ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ, 2 ವರ್ಷದಲ್ಲಿಯೇ ತೀರ್ಪು! ಆರೋಪಿಗೆ 20 ವರ್ಷ ಶಿಕ್ಷೆ!
ಘಟನೆಯ ವಿವರ:
ನಗರದ ರಾಜೀವ್ ಗಾಂಧಿ ಬಡಾವಣೆಯ ಕಂಟ್ರಿ ಕ್ಲಬ್ ರಸ್ತೆಯ ಮಹಾವೀರ ಗೋಶಾಲೆ ಬಳಿ, ನಿಸಾನ್ ಸನ್ನಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಗಸ್ತು ಕರ್ತವ್ಯದಲ್ಲಿದ್ದ ಡಿವೈಎಸ್ಪಿ ಬಾಬು ಆಂಜನಪ್ಪ ಅವರು ಕೂಡಲೇ ಸ್ಥಳಕ್ಕೆ ಧಾವಿಸಿ ದಾಳಿ ನಡೆಸಿದರು.
ಪೊಲೀಸ್ ವಾಹನವನ್ನು ಕಂಡ ತಕ್ಷಣ ಕಾರಿನಲ್ಲಿದ್ದ ಆರೋಪಿಗಳು ವೇಗವಾಗಿ ವಾಹನ ಚಲಾಯಿಸಿ ಪರಾರಿಯಾಗಲು ಯತ್ನಿಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಕಾರನ್ನು ಬೆನ್ನಟ್ಟಿ, ಅಡ್ಡಗಟ್ಟಿ ಇಬ್ಬರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು. ಬಂಧಿತರನ್ನು ಅಶೋಕ ಪಿ. (28) ಮತ್ತು ರಾಕೇಶ್ (20) ಎಂದು ಗುರುತಿಸಲಾಗಿದೆ.
ಕಾರಿನ ಡಿಕ್ಕಿಯನ್ನು ಪರಿಶೀಲಿಸಿದಾಗ ಬಿಳಿ ಚೀಲದಲ್ಲಿ ಅಡಗಿಸಿಟ್ಟಿದ್ದ 1,067 ಗ್ರಾಂ ತೂಕದ ಗಾಂಜಾ ಪತ್ತೆಯಾಗಿದೆ. ಇದರ ಮಾರುಕಟ್ಟೆ ಮೌಲ್ಯ ಸುಮಾರು 1 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಗಾಂಜಾ ಪ್ಯಾಕ್ ಮಾಡಲು ಬಳಸುತ್ತಿದ್ದ 18 ಜಿಪ್ ಲಾಕ್ ಕವರ್ಗಳು, ಎಲೆಕ್ಟ್ರಾನಿಕ್ ತೂಕದ ಯಂತ್ರ ಹಾಗೂ 3,290 ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ.
ಗಾಂಜಾ ಸಾಗಾಟಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

