ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ನಾಡಿನೆಲ್ಲೆಡೆ ಇಂದು ಮುಸ್ಲಿಂ ಬಾಂಧವರು ತಮ್ಮ ಪ್ರಮುಖ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಅನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಇದರ ನಡುವೆ ಶಿವಮೊಗ್ಗದಲ್ಲೂ ಸಹ ಮುಸ್ಲಿಂ ಬಾಂಧವರು ಹಬ್ಬದ ಆಚರಣೆಯೊಂದಿಗೆ ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದಿದ್ದಾರೆ.
ಹೌದು, ಜಿಲ್ಲೆಯಲ್ಲಿ ಮಿತಿಮೀರಿ ಹೆಚ್ಚುತ್ತಿರುವ ಮಾದಕ ವಸ್ತುಗಳನ್ನು ತಡೆಯುವ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ಇಲಾಖೆಯು ಬೇಡ ಬ್ರೋ ಎನ್ನುವ ಜಾಗೃತಿ ಪರಿಕಲ್ಪನೆಯನ್ನು ಜಾರಿಗೆ ತಂದಿದೆ. ಹಾಗೆಯೇ ಜಿಲ್ಲಾದ್ಯಂತ ಗಾಂಜಾವನ್ನು ಮಟ್ಟಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಇದರ ನಡುವೆ, ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮಿನಕೊಪ್ಪದಲ್ಲಿ ಇಂದು ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ನಶಾ ಮುಕ್ತ ಭಾರತ ಮತ್ತು ಬೇಡ ಬ್ರೋ, ಗಾಂಜಾ ಬೇಡ ಬ್ರೋ ಎಂಬ ವಿಷಯಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಬಿ ವಿಭಾಗದ ಡಿವೈಎಸ್ಪಿ ಸಂಜೀವ್ ಕುಮಾರ್ ಮತ್ತು ವಿನೋಬನಗರ ಪೊಲೀಸ್ ಠಾಣೆಯ ಪಿಐ ಸಂತೋಷ್ ಕುಮಾರ್ ಡಿ.ಕೆ. ಅವರ ನೇತೃತ್ವದಲ್ಲಿ ಮುಸ್ಲಿಂ ಬಾಂಧವರು ಪೋಸ್ಟರ್ಗಳನ್ನು ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಿದರು.
