Shivamogga mahanagara palike : ಜುಲೈ 07 ಮಹಾನಗರ ಪಾಲಿಕೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ನಗರ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ
ಶಿವಮೊಗ್ಗ : ಆರೋಗ್ಯ ಸಂಜೀವಿನಿ ಯೋಜನೆ ಜಾರಿ, 7ನೇ ವೇತನ ಆಯೋಗದ ಸೌಲಭ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರು ನಾಳೆಯಿಂದ (ಜುಲೈ 8, 2025) ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಮಹಾನಗರ ಪಾಲಿಕೆಗಳ ನೌಕರರ ಸಂಘದ ರಾಜ್ಯ ಸಮಿತಿಯ ಕರೆಯ ಮೇರೆಗೆ ಈ ಮುಷ್ಕರವನ್ನು ಆಯೋಜಿಸಲಾಗಿದೆ.
Shivamogga mahanagara palike ಮುಷ್ಕರಕ್ಕೆ ಕಾರಣಗಳು ಮತ್ತು ಬೇಡಿಕೆಗಳು:
ಮಹಾನಗರ ಪಾಲಿಕೆಯ ಸ್ವಚ್ಛತಾ ಕಾರ್ಮಿಕರು ಸೇರಿದಂತೆ ಎಲ್ಲಾ ವಿಭಾಗಗಳ ನೌಕರರು ಈ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರಿಂದಾಗಿ ನಗರದ ಸ್ವಚ್ಛತೆ, ಕಂದಾಯ ಸಂಗ್ರಹ ಮತ್ತು ಇತರೆ ಪ್ರಮುಖ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ನೌಕರರ ಪ್ರಮುಖ ಬೇಡಿಕೆಗಳು ಹೀಗಿವೆ

- ಸರ್ಕಾರಿ ನೌಕರರಿಗೆ ನೀಡುತ್ತಿರುವ 7ನೇ ವೇತನ ಆಯೋಗದ ಸೌಲಭ್ಯಗಳನ್ನು ಪಾಲಿಕೆ ನೌಕರರಿಗೂ ವಿಸ್ತರಿಸುವುದು ಮತ್ತು ಅದಕ್ಕೆ ಬೇಕಾದ ಅನುದಾನ ಬಿಡುಗಡೆ ಮಾಡುವುದು.
- ವೃಂದ ಮತ್ತು ನೇಮಕಾತಿ ನಿಯಮಾವಳಿಗಳನ್ನು ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸುವುದು.
- ಪಾಲಿಕೆ ನೌಕರರಿಗೂ ಕೆಜಿಐಡಿ (ಕರ್ನಾಟಕ ಸರ್ಕಾರಿ ವಿಮಾ ಇಲಾಖೆ) ಮತ್ತು ಜಿಪಿಎಫ್ (ಸಾಮಾನ್ಯ ಭವಿಷ್ಯ ನಿಧಿ) ಸೌಲಭ್ಯಗಳನ್ನು ವಿಸ್ತರಿಸುವುದು.
- ಆರೋಗ್ಯ ಸೌಲಭ್ಯದ ಜ್ಯೋತಿ/ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸುವುದು.
- ಪಾಲಿಕೆ ಅಧಿಕಾರಿ/ನೌಕರರಿಗೆ ಪ್ರತಿ ವರ್ಷ ಕ್ರೀಡಾಕೂಟ ಆಯೋಜಿಸುವುದು.
- ವಿವಿಧ ವೃಂದಗಳ ಹುದ್ದೆಗಳಿಗೆ ಮುಂಬಡ್ತಿ ನೀಡುವುದು.
ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎನ್. ಗೋವಿಂದ, ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್ ಮತ್ತು ಉಪಾಧ್ಯಕ್ಷ ಪಿ. ಕುಮಾರ್ ಅವರ ನೇತೃತ್ವದಲ್ಲಿ ನಾಳೆ ಬೆಳಗ್ಗೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ.