ನೀರಾವರಿ ಸಚಿವರ ಬಳಿ, ₹22.42 ಕೋಟಿ ಯೋಜನೆಗೆ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ನಿಯೋಗ ಡಿಮ್ಯಾಂಡ್!

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗ ಗ್ರಾಮಾಂತರ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಾಗಿ ಸಚಿವರಿಗೆ ಮನವಿ ಸಲ್ಲಿಸಿದ ನಿಯೋಗ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆರೆಗಳಿಗೆ ಕೊಳವೆ ಮಾರ್ಗದ ಮೂಲಕ ನೀರು ತುಂಬಿಸುವ ₹22.42 ಕೋಟಿ ಅಂದಾಜು ವೆಚ್ಚದ ಯೋಜನೆಗೆ (Shivamogga Rural Lakes) ತುರ್ತಾಗಿ ಅನುಮೋದನೆ ನೀಡಿ, ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ನಿಯೋಗ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ನಿಯೋಗವು ಬೆಂಗಳೂರಿನಲ್ಲಿ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿ, ಯೋಜನೆಯ ಅಗತ್ಯ ಮತ್ತು ಗ್ರಾಮಾಂತರ ಪ್ರದೇಶದ ರೈತರು ಎದುರಿಸುತ್ತಿರುವ ನೀರಿನ ಸಮಸ್ಯೆಗಳ ಕುರಿತು ವಿವರಿಸಿತು.ರೈತರ ಬಹುಕಾಲದ ನೀರಿನ ಸಮಸ್ಯೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸುವ ಉದ್ದೇಶದಿಂದ ಯೋಜನೆಗೆ ಆದ್ಯತೆಯ ಮೇರೆಗೆ ಅನುಮೋದನೆ ನೀಡಬೇಕು. ಅಗತ್ಯ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸಂಸದರು ಸಚಿವರಲ್ಲಿ ಮನವಿ ಮಾಡಿದರು.

ನಿಯೋಗದ ಮನವಿಯ ಮುಖ್ಯಾಂಶಗಳು

  1. ತುಂಗಾ ನದಿಯಿಂದ ಎತ್ತಲಾಗುವ 1.347 ಟಿಎಂಸಿ ನೀರಿನ ಮೂಲಕ ಶಿವಮೊಗ್ಗ ತಾಲೂಕಿನ ಹಾಯ್‌ಹೊಳೆ, ಬಾರೇಹಳ್ಳ ಮತ್ತು ಗೌಡನಕೆರೆ ವ್ಯಾಪ್ತಿಗೆ ಒಳಪಡುವ 7,310 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ.
  2. ಇದರೊಂದಿಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಕೆರೆಗಳಿಗೆ ಪೈಪ್‌ಲೈನ್ ಮೂಲಕ ನೀರು ತುಂಬಿಸುವ ಪ್ರಸ್ತಾವನೆಗೆ ತುರ್ತು ಅನುಮೋದನೆ ಮತ್ತು ಅನುದಾನ ನೀಡಬೇಕು
  3. ಹೊಸಹಳ್ಳಿ ಮತ್ತು ತುಂಗಾ ಏತ ನೀರಾವರಿ ಯೋಜನೆಗಳ ಅಡಿಯಲ್ಲಿ ಗುರುತ್ವಾಕರ್ಷಣೆಯ ಮೂಲಕ ನೀರು ಹರಿಸುವ ಮಾರ್ಗಗಳಿಗೆ ಹಾನಿಯಾಗಿದೆ. ನೀರಿನ ಹರಿವಿನ ಮೇಲ್ಭಾಗದಲ್ಲಿ ಬಳಕೆಯ ಪ್ರಮಾಣ ಹೆಚ್ಚಾಗಿರುವುದರಿಂದ ಯೋಜನೆಯ ಅಂತಿಮ ಭಾಗದಲ್ಲಿರುವ ಕೆರೆಗಳಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ
  4. ಅಂತಿಮ ಭಾಗದ ಕೆರೆಗಳಿಗೆ ಅಗತ್ಯ ಪ್ರಮಾಣದಲ್ಲಿ ನೀರು ತಲುಪದಿರುವುದರಿಂದ ಈ ವ್ಯಾಪ್ತಿಯ ರೈತರು ನೀರಾವರಿ ಸಮಸ್ಯೆ ಎದುರಿಸುತ್ತಿದ್ದಾರೆ. ಅಂತರ್ಜಲದ ಮಟ್ಟ ಕುಸಿಯುತ್ತಿರುವುದರ ಜೊತೆಗೆ ಜಾನುವಾರುಗಳಿಗೆ ಮತ್ತು ಜನರ ಕುಡಿಯುವ ನೀರಿನ ಅಗತ್ಯ ಪೂರೈಸುವುದಕ್ಕೂ ಸಮಸ್ಯೆಯಾಗುತ್ತಿದೆ
  5. ಈ ಹಿನ್ನೆಲೆಯಲ್ಲಿ ಎರಡು ಹಂತಗಳಲ್ಲಿ ಕೊಳವೆ ಮಾರ್ಗದ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಕೈಗೆತ್ತಿಕೊಳ್ಳಲು ಯೋಜಿಸಲಾಗಿದೆ. ಇದಕ್ಕಾಗಿ ಒಟ್ಟು ₹22.42 ಕೋಟಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸಹ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ.
  6. ಯೋಜನೆಯ ಮೊದಲ ಹಂತದ ಕಾಮಗಾರಿಗೆ ₹9.76 ಕೋಟಿ ಮತ್ತು ಎರಡನೇ ಹಂತದ ಕಾಮಗಾರಿಗೆ ₹9.96 ಕೋಟಿ ಅಂದಾಜಿಸಲಾಗಿದೆ. ಇದರೊಂದಿಗೆ ₹2.70 ಕೋಟಿ ಸೇರಿದಂತೆ ಯೋಜನೆಯ ಒಟ್ಟು ಅಂದಾಜು ವೆಚ್ಚ ₹22.42 ಕೋಟಿಯಾಗಿದೆ.
  7. ಯೋಜನೆ ಅನುಷ್ಠಾನಗೊಂಡರೆ ನೀರಾವರಿ ಯೋಜನೆಯ ಕೊನೆಯ ಭಾಗದಲ್ಲಿರುವ ರೈತರಿಗೂ ನೀರಿನ ಸೌಲಭ್ಯ ದೊರೆಯಲಿದೆ. ಕೆರೆಗಳಿಗೆ ಪೈಪ್‌ಲೈನ್ ಮೂಲಕ ನೀರು ತುಂಬಿಸುವುದರಿಂದ ನೀರಾವರಿ ವ್ಯವಸ್ಥೆ ಬಲಗೊಳ್ಳುವುದರೊಂದಿಗೆ ಅಂತರ್ಜಲ ಮರುಪೂರಣಕ್ಕೂ ಸಹಕಾರಿಯಾಗಲಿದೆ ಎಂದು ನಿಯೋಗ ತಿಳಿಸಿದೆ.

ನಿಯೋಗದ ಮನವಿಯನ್ನು ಆಲಿಸಿದ ಸಚಿವ ಎನ್. ಚಲುವರಾಯಸ್ವಾಮಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪ್ರದೇಶದ ರೈತರ ನೀರಿನ ಅಗತ್ಯವನ್ನು ಪರಿಗಣಿಸಿ, ಯೋಜನೆಯ ಪ್ರಸ್ತಾವನೆಗೆ ಸಂಬಂಧಿಸಿದ ಕಡತವನ್ನು ಪರಿಶೀಲಿಸಲಾಗುವುದು. ಬಳಿಕ ಅಗತ್ಯ ಕ್ರಮ ಕೈಗೊಂಡು, ಆದ್ಯತೆಯ ಮೇರೆಗೆ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ, ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯಕ್, ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಸಿಂಗನಹಳ್ಳಿ ಸುರೇಶ್ ಹಾಗೂ ಪ್ರಮುಖ ರೈತ ಮುಖಂಡರು ಉಪಸ್ಥಿತರಿದ್ದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor