ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮೇ 09ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗಕ್ಕೆ ಬಿಜೆಪಿಯ ವರಿಷ್ಟ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಆಗಮನಿಸಿದ್ದಾರೆ. ಹಲವರು ವಿಶೇಷ ವಿಮಾನಗಳ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಚಿತ್ರದುರ್ಗಕ್ಕೆ ತೆರಳಲಿದ್ದಾರೆ.
ಹೀಗಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಗಣ್ಯ ವ್ಯಕ್ತಿಗಳ ಭದ್ರತೆಯ ಹಿತದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಶೇಷ ಭದ್ರತೆ ಒದಗಿಸಲಾಗಿದೆ. ಹೈ ಸೆಕ್ಯುರಿಟಿ ಹಿನ್ನೆಲೆಯಲ್ಲಿ ಎಸ್ಪಿ ನಿಖಿಲ್ ಬಿ ನಿನ್ನೆ ದಿನ ಶಿವಮೊಗ್ಗ ಏರ್ಪೋರ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭದ್ರತಾ ಲೋಪವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ತಮ್ಮ ಸಿಬ್ಬಂದಿಗಳಿಗೆ ಈ ವೇಳೆ ಸೂಚನೆಗಳನ್ನ ನೀಡಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ನಿರ್ದೇಶನದಂತೆ ವಿಮಾನ ನಿಲ್ದಾಣದ ಆವರಣದಲ್ಲಿ ಕೈಗೊಳ್ಳಬೇಕಾದ ಅತ್ಯಗತ್ಯ ಸುರಕ್ಷತಾ ಕ್ರಮಗಳ ಕುರಿತು ಎಸ್ಪಿ ನಿಖಿಲ್ ಬಿ. ಅವರು ಖುದ್ದಾಗಿ ಪರಿಶೀಲನೆ ನಡೆಸಿದ್ದಾರೆ. ಗಣ್ಯರು ಬಂದಿಳಿಯುವ ಸ್ಥಳ, ಅವರು ನಿರ್ಗಮಿಸುವ ಮಾರ್ಗ ಹಾಗೂ ವಾಹನಗಳ ನಿಲುಗಡೆ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸುವ ಬಗ್ಗೆ ಭದ್ರತಾ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ವಿಐಪಿಗಳ ಆಗಮನದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಗಣ್ಯರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಇನ್ನೂ ಶಿವಮೊಗ್ಗ ವಿಮಾನ ನಿಲ್ದಾಣ ದಿಂದ ಚಿತ್ರದುರ್ಗದವರೆಗೆ ಗಣ್ಯರು ಪ್ರಯಾಣಿಸುವ ಮಾರ್ಗದುದ್ದಕ್ಕೂ ಸೂಕ್ತ ಪೊಲೀಸ್ ಭದ್ರತೆಯನ್ನು ಒದಗಿಸುವ ಕುರಿತು ಪ್ರತ್ಯೇಕ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹಾಗೂ ಸ್ಥಳೀಯ ಪೊಲೀಸರ ನಡುವೆ ಸಮನ್ವಯ ಸಾಧಿಸಲಾಗಿದೆ.
ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

