Wild elephant attack ಚಿಕ್ಕಮಗಳೂರು: ಕಾಡಾನೆ ದಾಳಿಗೆ ಯುವತಿ ಬಲಿ,
ನರಸಿಂಹರಾಜಪುರ : ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ. ಹೊನ್ನಾಳಿ ಮೂಲದ ಅನಿತಾ (25) ಮೃತಪಟ್ಟ ದುರ್ದೈವಿ.
ಘಟನೆ ವಿವರ:
ಅನಿತಾ ಅವರು ಬನ್ನೂರು ಸಮೀಪದ ಕಾಫಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ನಿನ್ನೆ (ಬುಧವಾರ) ಕೂಡ ಕೆಲಸ ಮುಗಿಸಿ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ, ಕಾಡಾನೆಯೊಂದು ಏಕಾಏಕಿ ಅವರ ಮೇಲೆ ದಾಳಿ ಮಾಡಿದೆ ಎನ್ನಲಾಗಿದೆ. ಆನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅನಿತಾ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.


ಆದರೆ, ಗಾಯಗಳು ಗಂಭೀರವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆತರುವಾಗ ಮಾರ್ಗಮಧ್ಯೆಯೇ ಅನಿತಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
